ರಾಯಚೂರು, 23 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರವು ಜನತೆಗೆ ವಚನ ಕೊಟ್ಟಂತೆ ನಡೆದುಕೊಂಡ ಸರ್ಕಾರ ನಮ್ಮದು. ಜನರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆ, ಜನರ ಜೀವನಕ್ಕೆ ಆರ್ಥಿಕ ಸಹಾಯ ಮಾಡುವ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಮಹತ್ವದ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದೇವೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಹೇಳಿದರು.
ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಹತ್ತಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಇವರ ವತಿಯಿಂದ ನಡೆದ ಬುಡಕಟ್ಟು ಸಾಂಸ್ಕೃತಿಕ ಉತ್ಸವ ಹಾಗೂ 371(ಜೆ) ದಶಮಾನೋತ್ಸವ ಮತ್ತು 936.00 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಗೆ ನಾವು ಬಜೆಟನಲ್ಲಿ ಅನುದಾನ ಮೀಸಲಿರಿಸಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಅಧಿಕಾರಕ್ಕೆ ಬಂದು ಎರಡು ವರ್ಷದ ಅವಧಿಯಲ್ಲಿ ನಾವು ಅಂದಾಜು 90,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ. ಚುನಾವಣಾ ಸಂದರ್ಭದಲ್ಲಿ ರಾಜ್ಯ ಸರ್ಕಾರವು 560ಕ್ಕೂ ಹೆಚ್ಚು ಭರವಸೆ ನೀಡಿದ ಪೈಕಿ ನಾವು ಈ ಎರಡು ವರ್ಷಗಳ ಅವಧಿಯಲ್ಲಿ ಈಗಾಗಲೇ 242 ಭರವಸೆಗಳನ್ನು ಈಡೇರಿಸಿದ್ದೇವೆ. ಇನ್ನು ಮೂರ ವರ್ಷದಲ್ಲಿ ಇನ್ನುಳಿದ ಭರವಸೆಗಳನ್ನು ಸಹ ಈಡೇರಿಸುತ್ತೇವೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕದ ಭಾಗವು ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಹಿಂದುಳಿದಿದೆ. ಇದು ಸರಿ ಆಗಬೇಕು. ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಸಾವಿರಾರು ಕೋಟಿ ರೂ ಗಳನ್ನು ನೀಡುತ್ತಿದೆ. ರಾಯಚೂರ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಪ್ರದೇಶಕ್ಕೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಕೊಡಬೇಕು ಎಂದು ಕೆಕೆಆರ್ಡಿಬಿ ಅಧ್ಯಕ್ಷರಿಗೆ ತಿಳಿಸಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಮಾತನಾಡಿ, ಮಹತ್ವದ 371 (ಜೆ) ಜಾರಿ ಮೂಲಕ, ಹಿಂದುಳಿದ ಭಾಗದ ಜನತೆಗೆ ಅನುಕೂಲ ಕಲ್ಪಿಸಲು ಶ್ರಮಿಸಿದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಮ್ಮ ಭಾಗದ ಅನೇಕ ಮಹನಿಯರು ನಮಗೆ ಕಾಮಧೇನು ಮತ್ತು ಕಲ್ಪವೃಕ್ಷ ಆಗಿದ್ದಾರೆ. 371 (ಜೆ) ಜಾರಿಯಿಂದಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಮ್ಮ ಸಾಧನೆ ಅನನ್ಯವಾಗಿದೆ. 371(ಜೆ) ವಿಶೇಷ ಸ್ಥಾನಮಾನ ಜಾರಿಯಿಂದಾಗಿ ಈ ಭಾಗದಲ್ಲಿ ಎಲ್ಲರಿಗೂ ರಕ್ಷಣೆ ಸಿಗುವಂತಾಗಿದೆ. ಈ ಮೀಸಲು ಸೌಕರ್ಯ ಪಡೆದು ಈ ಭಾಗದ 9 ಸಾವಿರ ಮಕ್ಕಳು ಡಾಕ್ಟರ್ ಆಗಿದ್ದಾರೆ. ಇದೇ ರೀತಿ ಅನೇಕರು ನೌಕರಿ ಗಿಟ್ಟಿಸಿದ್ದಾರೆಂಬುದು ಸಣ್ಣ ಸಾಧನೆಯಲ್ಲ. ಈ ಭಾಗದ ಎಲ್ಲ ಹುದ್ದೆಗಳಲ್ಲಿ ಶೇ.75 ಹುದ್ದೆಗಳು ನಮ್ಮ ಭಾಗದ ಜನತೆಗೆ ದಕ್ಕಿದೆ. ಇದು ಬಹುದೊಡ್ಡ ಸಾಮಾಜಿಕ ಬದಲಾವಣೆ ಆಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಮಾತನಾಡಿ, ರಾಜ್ಯದಲ್ಲಿ ನಮ್ಮ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿ ಜನಪರವಾಗಿ ಕೆಲಸ ಮಾಡುತ್ತಿದೆ. ರಾಯಚೂರ ಜಿಲ್ಲೆಯಲ್ಲಿ ಎರಡು ನದಿಗಳು ಹರಿದಿವೆ. ಆದಾಗ್ಯೂ ರಾಯಚೂರ ಗ್ರಾಮೀಣ ಪ್ರದೇಶದ ನನ್ನ ರೈತಾಪಿ ಜನರಿಗೆ ನೀರು ಸಿಗುತ್ತಿಲ್ಲ. ಮೇಲಿನ ನೀರು ನಮಗು ಸಹ ನ್ಯಾಯಯುತವಾಗಿ ಸಿಗಬೇಕು. ರಾಯಚೂರ ಗ್ರಾಮೀಣ ಕ್ಷೇತ್ರದಲ್ಲಿ ಈಗಾಗಲೇ ನೀರು ಎತ್ತುವ ಎರಡು ಯೋಜನೆಗಳು ಅನುಷ್ಠಾನವಾಗುತ್ತಿವೆ. ಇನ್ನು ಮೂರು ನೀರು ಎತ್ತುವ ನೀರಾವರಿ ಯೋಜನೆಗಳಿಗೆ ಡಿಪಿಆರ್ ಆಗಿದೆ ಎಂದರು.
ನಮ್ಮ ಭಾಗಕ್ಕೆ 371(ಜೆ) ಮೀಸಲು ಸ್ನಾನಮಾನ ಲಭ್ಯವಾಗಿದ್ದರಿಂದಾಗಿ ನಮ್ಮ ಭಾಗದ ಜನರು ಉದ್ಯೋಗವಕಾಶ ಪಡೆಯುವಂತಾಗಿದೆ. ಇದರ ಸ್ಮರಣಾರ್ಥ ದಶಮಾನೋತ್ಸವ ಸಂಚಿಕೆ ಪ್ರಕಟಿಸಿ ಬಿಡುಗಡೆ ಮಾಡಿದ್ದೇವೆ. ರಾಯಚೂರ ಗ್ರಾಮೀಣ ಪ್ರದೇಶಕ್ಕೆ ಸೂಕ್ತ ನ್ಯಾಯಸಿಗುವ ನಿಟ್ಟಿನಲ್ಲಿ ಈ ಪ್ರದೇಶವನ್ನು ತಾಲೂಕು ಕೇಂದ್ರ ಎಂದು ಘೋಷಿಸಬೇಕು. ದೇವಸಗೂರನ್ನು ನಗರಸಭೆಯಾಗಿ ಮೇಲ್ದರ್ಜೇಗರಿಸಬೇಕು ಎಂದು ಶಾಸಕರು ಇದೆ ವೇಳೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಕಾರ್ಯಕ್ರಮದಲ್ಲಿ ನಾನಾ ಯೋಜನೆಗಳಡಿ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರು, ಶಾಸಕರು ಸಾಂಕೇತಿಕವಾಗಿ ಸೌಲಭ್ಯ ವಿತರಿಸಿದರು. ಭೂ ಒಡೆತನ ಯೋಜನೆಯ ಹಕ್ಕುಪತ್ರ, ಪ್ರೇರಣಾ ಯೋಜನೆಯ ಯೋಜನಾ ಮಂಜೂರಾತಿ ಆದೇಶ ಪತ್ರ ಸೇರಿದಂತೆ ನಾನಾ ಸೌಕರ್ಯಗಳ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕರು ಹಾಗೂ ಸಂಸದರಾದ (ರಾಜ್ಯ ಸಭೆ) ಡಾ.ಮಲ್ಲಿಕಾರ್ಜುನ ಖರ್ಗೆ, ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಡಾ.ಹೆಚ್.ಕೆ.ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್.ಎಸ್. ಭೋಸರಾಜು, ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಡಾ.ಎಂ.ಸಿ. ಸುಧಾಕರ್, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಇಲಾಖೆ ಸಚಿವರಾದ ಶರಣಬಸಪ್ಪ ದರ್ಶನಾಪೂರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ.ಅಜಯ್ ಧರ್ಮಸಿಂಗ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ಖಾನ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಯಾದಗಿರಿ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ ತನ್ನೂರ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಪಾಟೀಲ್, ಶರಣಗೌಡ ಅ. ಪಾಟೀಲ್ ಬಯ್ಯಾಪೂರ, ಮುಖಂಡರಾದ ಅಮರೇಗೌಡ ಪಾಟೀಲ ಬಯ್ಯಾಪುರ, ತುಂಗಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನಸಾಬ್ ನಬಿಸಾಬ್ ದೋಟಿಹಾಳ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ರಾಯಚೂರು ತಾಲ್ಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಯರಗೇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಹಾದೇವಿ ಗಂ. ಭೀಮೇಶ ನಾಯಕ್, ಆರ್ಥಿಕ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು, ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ಡೆ, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ. ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ಲಿಂಗಸೂರ ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ, ತಹಸೀಲ್ದಾರ ಸುರೇಶ ವರ್ಮಾ, ಮುಖಂಡರಾದ ಬಸವರಾಜ ಪಾಟೀಲ ಇಟಗಿ, ಜಯಂತರಾವ್ ಪತಂಗೆ, ಮಲ್ಲಿಕಾರ್ಜುನಗೌಡ ತಲಮಾರಿ, ನಾಗೇಂದ್ರಪ್ಪ ಮಟಮಾರಿ, ರಜಾಕ್ ಉಸ್ತಾದ್, ಅಸ್ಲಂ ಪಾಶಾ, ಚನ್ನಬಸು ನಾಯಕ ಸೇರಿದಂತೆ ಇತರರು ಇದ್ದರು.
ವಿಧಾನ ಪರಿಷತ್ ಶಾಸಕರಾದ ಎ. ವಸಂತಕುಮಾರ ಅವರು ಸ್ವಾಗತಿಸಿದರು. ರಾಯಚೂರ ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅವರು ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್