ಕೋಲಾರ, ೨೪ ಜೂನ್ (ಹಿ.ಸ) :
ಆ್ಯಂಕರ್ : ಕ್ರೀಡೆಗಳಿಂದ ಉತ್ತಮ ಆರೋಗ್ಯದ ಜತೆಗೆ ಸದಾ ಕ್ರಿಯಾಶೀಲರಾಗಿರಲು ಸಹಕಾರಿಯಾಗಿದ್ದು ಪಠ್ಯ ಕಲಿಕೆಗೆ ಆಸಕ್ತಿ ಇಮ್ಮಡಿಗೊಳ್ಳುತ್ತದೆ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ತಾಹೇರಾ ನುಸ್ರತ್ ಕರೆ ನೀಡಿದರು.
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಟ್ಟದ ಕ್ರೀಡಾಕೂಟಕ್ಕೆ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಕ್ರೀಡೆಗಳಿಂದ ಉತ್ತಮ ಆರೋಗ್ಯದ ಜತೆಗೆ ಕ್ರಿಯಾಶೀಲತೆ ನಿಮ್ಮದಾಗಲಿದ್ದು, ಆಟೋಟಗಳಿಗೆ ಆದ್ಯತೆ ನೀಡಿದರೆ ಜೀವನದಲ್ಲಿ ಶಿಸ್ತು, ವ್ಯಕ್ತಿತ್ವ ವಿಕಸನವೂ ಆಗಲಿದೆ, ನಿಮ್ಮಲ್ಲಿ ವಿದ್ಯೆ ಕಲಿಯುವ ಆಸಕ್ತಿಯೂ ಹೆಚ್ಚಲಿದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳನ್ನು ಪಠ್ಯಕ್ಕೆ ಸೀಮಿತಗೊಳಿಸುವ ಪ್ರಯತ್ನ ಪೋಷಕರಿಂದ ನಡೆಯುತ್ತಿದೆ, ಉತ್ತಮ ಅಂಕಗಳ ನಿರೀಕ್ಷೆಯಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ವಿಷಾದಿಸಿದ ಅವರು, ಶಾರೀರಿಕ, ಮಾನಸಿಕ ಆರೋಗ್ಯದ ಜತೆಗೆ ಜೀವನದಲ್ಲಿ ಶಿಸ್ತು ಮೂಡಲು ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಭಾಗವಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳಿ, ಕ್ರೀಡೆಯಲ್ಲಿ ಮಾತ್ರ ಎಲ್ಲರೂ ಭಾಗವಹಿಸಲು ಅವಕಾಶವಿದೆ, ಗೆಲುವು ಒಬ್ಬರಿಗೆ ಸಿಕ್ಕರೂ ಅದರಿಂದ ವಿಚಲಿತರಾಗದೇ ಉಳಿದವರು ಅಭ್ಯಾಸ ಮುಂದುವರೆಸಿ ಎಂದು ತಿಳಿಸಿದರು.
ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಲೀಲಾ ಕ್ರೀಡಾಕೂಟದ ನೇತೃತ್ವ ವಹಿಸಿ ಮಾತನಾಡಿ, ಉತ್ತಮ ಪ್ರದರ್ಶನ ನೀಡುವುದು ಮುಖ್ಯ, ಆ ಮೂಲಕ ಕ್ರೀಡಾ ಮನೋಭಾವ ತೋರಬೇಕು ಎಂದ ಅವರು ಸೋಲು-ಗೆಲುವು ಸಮನಾಗಿ ಸ್ವೀಕರಿಸಿ ಸೋತವರು ಮುಂದಿನ ಹೋರಾಟಕ್ಕೆ ಸಜ್ಜುಗೊಂಡು ಗೆಲ್ಲುವ ನಿರೀಕ್ಷೆಯೊಂದಿಗೆ ಅಭ್ಯಾಸ ಮುಂದುವರೆಸಬೇಕು ಎಂದರು.
ಶಿಕ್ಷಕರಾದ ಸಿದ್ದೇಶ್ವರಿ ಮಾತನಾಡಿ, ಕ್ರೀಡಾಳುಗಳು ಹೆಚ್ಚಿನ ಉತ್ಸಾಹದಿಂದ ಪಾಲ್ಗೊಳ್ಳಿ, ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ, ಕ್ರೀಡೆಗಳ ಕುರಿತ ನಿರಾಸಕ್ತಿ ಸರಿಯಲ್ಲ ಎಂದ ಅವರು, ಇತ್ತೀಚಿನ ಬದಲಾದ ಆಹಾರ ಪದ್ದತಿಯಿಂದಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದು, ಇದರಿಂದ ಮುಕ್ತರಾಗಲು ಕ್ರೀಡೆಗಳ ಅಗತ್ಯವಿದೆ ಎಂದು ತಿಳಿಸಿದರು.
ಶಿಕ್ಷಕ ಎಂ.ಆರ್.ಗೋಪಾಲಕೃಷ್ಣ ಮಾತನಾಡಿ, ರಾಜ್ಯ,ರಾಷ್ಟçಮಟ್ಟದಲ್ಲೂ ಉತ್ತಮ ಸಾಧನೆ ಮಾಡಿ ಹೆಸರು ಗಳಿಸಲು ಕ್ರೀಡೆಗಳು ಸಹಕಾರಿಯಾಗಿದ್ದು, ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ ನೀವು ರಾಜ್ಯ,ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದರೆ ನಿಮಗೆ ಸರ್ಕಾರದ ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲೂ ಮೀಸಲಾತಿ ಸಿಗುತ್ತದೆ ಎಂದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಭವಾನಿ, ವೆಂಕಟರೆಡ್ಡಿ, ಸುಗುಣಾ, ಶ್ವೇತಾ, ಶ್ರೀನಿವಾಸಲು, ರಮಾದೇವಿ ಮತ್ತಿತರರಿದ್ದರು.
ಚಿತ್ರ ; ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಟ್ಟದ ಕ್ರೀಡಾಕೂಟಕ್ಕೆ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಮುಖ್ಯಶಿಕ್ಷಕಿ ತಾಹೇರಾ ನುಸ್ರತ್ ಚಾಲನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್