ಬೆಂಗಳೂರು, 25 ಜೂನ್ (ಹಿ.ಸ.) :
ಆ್ಯಂಕರ್ : ಎಂಜಿನಿಯರಿಂಗ್ ಸೀಟ್ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕರ್ನಾಟಕ ರಾಜ್ಯದ ನಾನಾ ಕಡೆ ದಾಳಿ ನಡೆಸಿದ್ದಾರೆ.
ಬೆಂಗಳೂರು ಸೇರಿದಂತೆ 18 ಕಡೆಗಳಲ್ಲಿ ಇಂಜಿನಿಯರಿಂಗ್ ಕಾಲೇಜುಗಳು, ಕಾಲೇಜು ಆಡಳಿತ ಮಂಡಳಿ ಸದಸ್ಯರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜ್ಗಳಲ್ಲಿ ಸೀಟ್ಗಳನ್ನು ಬ್ಲಾಕ್ ಮಾಡಿ ಅಕ್ರಮವಾಗಿ ಹಂಚಿಕೆ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಕಳೆದ ವರ್ಷ ಬೆಂಗಳೂರಿನ ಮಲ್ಲೇಶ್ವರಂನ ಸಿಇಎನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಪ್ರಮುಖ ವ್ಯಕ್ತಿ ಸೇರಿದಂತೆ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದರು.
ಪ್ರಕರಣದ ಮಾಹಿತಿ...
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೌಕರನ ಸಹಾಯದಿಂದ ಪಡೆದ ಪಾಸ್ವರ್ಡ್ ಬಳಸಿ, ಸರ್ಕಾರಿ ಸೀಟ್ ಪಡೆದು ಕಾಲೇಜ್ ಆಯ್ಕೆ ಮಾಡಿಕೊಳ್ಳದ ವಿದ್ಯಾರ್ಥಿಗಳ ಸೀಟ್ಗಳನ್ನು ಆರೋಪಿಗಳು ಬ್ಲಾಕ್ ಮಾಡುತ್ತಿದ್ದರು. ಆ ಸೀಟ್ಗಳನ್ನು ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ಮೆಂಟ್ ಕೋಟಾದಡಿ ಬೇರೆಯವರಿಗೆ ಒಪ್ಪಂದ ಮಾಡುತ್ತಿದ್ದರು.
ಕಾಲೇಜಿನ ಆಡಳಿತ ಮಂಡಳಿ ಹಾಗೂ ಮಧ್ಯವರ್ತಿಗಳ ಸಹಾಯದಿಂದಲೇ ಈ ವ್ಯವಹಾರ ನಡೆಯುತ್ತಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೌನ್ಸೆಲಿಂಗ್ಗೆ ಹಾಜರಾಗಿ ಕಾಲೇಜ್ ಆಯ್ಕೆಯಾಗದೇ ಇರುವವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗುತ್ತಿದ್ದರು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿತ್ತು.
ಹಗರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾದ ಶಂಕೆಯಿರುವ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಪ್ರತ್ಯೇಕವಾಗಿ ತನಿಖೆ ಆರಂಭಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa