ರಾಯಚೂರು, 25 ಜೂನ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕರು ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಡಿಮೆ ಮಾಡಬೇಕು. ನಿಷೇಧಿತ ಪ್ಲಾಸ್ಟಿಕ್ ಬಳಸಬಾರದು ಎಂದು ಗೌರವಾನ್ವಿತ ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್ ಎ ಸಾತ್ವಿಕ್ ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್ 25ರಂದು ನಡೆದ ಪರಿಸರ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ನಗರಸಭೆ ಸೇರಿದಂತೆ ಇನ್ನೀತರ ಇಲಾಖೆಗಳು ಕ್ರಮ ವಹಿಸಿ ಅಂಗಡಿ, ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ಮಾರಾಟಗಾರರ ಮೇಲೆ ದಂಡ ವಿಧಿಸಿದರು ಸಹ ಕೆಲವೆಡೆ ಪ್ಲಾಸ್ಟಿಕ್ ಬಳಕೆ ಕಾಣುತ್ತದೆ. ಇದು ಸರಿಯಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದರು.
ಪರಿಸರ ಸರಿಯಾಗಿದ್ದಾಗ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ. ವಾಯು ಮಾಲಿನ್ಯದ ದುಷ್ಪರಿಣಾಮಗಳ ಬಗ್ಗೆ ಜನತೆ ಅರಿಯಬೇಕು. ಪ್ಲಾಸ್ಟಿಕ್ ಬಳಸಬಾರದು ಎಂದು ಮನವಿ ಮಾಡಿದರು.
ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಸದೆ ಪರಿಸರ ಸ್ನೇಹಿ ಮಾರ್ಗೋಪಾಯಗಳ ಬಗ್ಗೆ ತಿಳಿದು, ಮತ್ತಿತರರಿಗೂ ಅರಿವು ಮೂಡಿಸಲು ಜಿಲ್ಲೆಯ ಸಮಸ್ತ ನಾಗರೀಕರು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಬೇಕು. ಪ್ಲಾಸ್ಟಿಕ್ ವಸ್ತು ಬಳಸಬೇಡಿ, ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸಹಕರಿಸಬೇಕು ಎಂದರು.
ವಾಯುಮಾಲಿನ್ಯವು ಹೃದಯ ರಕ್ತನಾಳದ ಕಾಯಿಲೆಗೆ ಮುಖ್ಯ ಕಾರಣವಾದ ಅಂಶವಾಗಿದೆ. ಹೃದ್ರೋಗ ಮತ್ತು ಪಾಶ್ರ್ವವಾಯು, ಶ್ವಾಸಕೋಶದ ಕ್ಯಾನ್ಸರ್ ಸಹ ಬರುತ್ತವೆ. ಕಡಿಮೆ ಉಸಿರಾಟದಿಂದಾಗಿ ಡಯಾಬಿಟಿಸ್ ಬರಲಿದೆ ಎಂಬುದರ ಅಂಶಗಳ ಬಗ್ಗೆ ಸಾರ್ವಜನಿಕರು ಅರಿತು ಎಚ್ಚೆತ್ತುಕೊಳ್ಳಬೇಕು ಎಂದರು.
ಪ್ರತಿಜ್ಞಾ ವಿಧಿ ಬೋಧನೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶಿಕ್ಷಣ ವಿಭಾಗದ ಜಿಲ್ಲಾ ಸಂಚಾಲಕರಾದ ದಂಡಪ್ಪ ಬಿರಾದರ್ ಅವರು ಇದೆ ವೇಳೆ ಪರಿಸರ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಬಹುಮಾನ ವಿತರಣೆ: ವಿಶ್ವ ಪರಿಸರ ದಿನಾಚರಣೆ-2025ರ ಅಂಗವಾಗಿ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಎಸ್. ಅವರು ಚಾಲನೆ ನೀಡಿದರು.
ಈ ವೇಳೆ ಅವರು ಮಾತನಾಡಿ, ಮಾನವನಿಂದ ಪರಿಸರ ನಾಶವಾಗುತ್ತಿದ್ದು, ಮಾನವ ಮತ್ತು ಪರಿಸರ ನಡುವೆ ನಿರಂತರ ಸಂಘರ್ಷ ನಡೆಯುತ್ತಿದೆ. ಆಧುನಿಕ ಯುಗದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಅದನ್ನು ಕಡಿಮೆ ಮಾಡಬೇಕು. ಅದಕ್ಕಾಗಿ ಜಿಲ್ಲೆಯ ಎಲ್ಲಾ ಶಾಲಾ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಗಳಿಗೆ ಪ್ಲಾಸ್ಟಿಕ್ ಬಳಕೆ ಕುರಿತು ತಿಳಿ ಹೇಳಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂಗಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ್ ಈ ಪ್ರಕಾಶ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಆರ್.ಹೆಚ್.ಸಾಗರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್