ಕೋಲಾರ, ೨೮ ಜೂನ್ (ಹಿ.ಸ) :
ಆ್ಯಂಕರ್ : ಬ್ಯಾಂಕ್ಗಳು ಕೇವಲ ಸಾರ್ವಜನಿಕರಿಂದ ಹಣವನ್ನು ಠೇವಣಿ ಮಾಡಿಸಿಕೊಂಡು ಲಾಭ ಮಾಡಿಕೊಳ್ಳುವ ಉದ್ದೇಶವನ್ನಷ್ಟೇ ಇಟ್ಟುಕೊಳ್ಳದೇ, ಅರ್ಹರಿಗೆ ಅಗತ್ಯ ಸಾಲ ನೀಡಲು ಕೂಡ ಮುತುವರ್ಜಿ ವಹಿಸಬೇಕು ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಪ್ರವೀಣ್ ಪಿ ಬಾಗೇವಾಡಿ ಹೇಳಿದರು.
ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್ಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಕೆಲ ಖಾಸಗಿ ಬ್ಯಾಂಕ್ಗಳು ನಿರ್ಲಕ್ಯ÷್ಷ ತೋರುತ್ತಿರುವುದು ಸರಿಯಲ್ಲ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭಿಮಾ ಯೋಜನೆ, ಸುರಕ್ಷಾ ಭೀಮಾ ಯೋಜನೆ ಹಾಗೂ ಜನಧನ್ ಯೋಜನೆಯಡಿ ಅರ್ಹ ಎಲ್ಲಾ ಗ್ರಾಹಕರನ್ನು ನೊಂದಣಿ ಮಾಡಿಸಲು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ಶ್ರಮ ವಹಿಸಬೇಕು ಎಂದು ಸೂಚಿಸಿದರು.
ಪಿಎಂ ಸ್ವನಿಧಿ, ಸೂರ್ಯಘರ್, ಪಿಎಂಇಜಿಪಿ, ಮುದ್ರಾ, ಸ್ವಾವಲಂಭಿ ಸಾರಥಿ ಸೇರಿದಂತೆ ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳ ಸಬ್ಸಿಡಿ, ಸಹಾಯಧನ ಯೋಜನೆಗಳ ಬಗ್ಗೆ ಬ್ಯಾಂಕ್ಗಳು ಅಸಡ್ಡೆ ತೋರಬಾರದು. ಅರ್ಹತೆ ಇರುವವರಿಗೆ ತಡ ಮಾಡದೆ ಸಾಲ ವಿತರಿಸಬೇಕು. ಜನಸಾಮಾನ್ಯರ ಕಲ್ಯಾಣಕ್ಕಾಗಿ ಬ್ಯಾಂಕ್ಗಳು ಬದ್ದತೆ ತೋರಬೇಕು ಎಂದು ಕಿವಿಮಾತು ಹೇಳಿದರು.
ಕೃಷಿ, ತೋಟಗಾರಿಕೆ, ಹೈನೋದ್ಯಮ, ಶಿಕ್ಷಣಕ್ಕೆ ಹೆಚ್ಚಿನ ಸಾಲ ವಿತರಿಸಬೇಕು. ಇದರಿಂದ ಹಲವರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಲಭಿಸಿ, ಅನುಕೂಲವಾಗಲಿದೆ ಎಂದು ಹೇಳಿದರು. ಕೆನರಾ ಬ್ಯಾಂಕ್ ಸಹಾಯಕ ಮಹಾಪ್ರಬಂಧಕ ಅಶೋಕ್ ಕುಮಾರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಯೋಜನೆಗಳ ಅನುಷ್ಠಾನದಲ್ಲಿ ಎಲ್ಲಾ ಬ್ಯಾಂಕ್ಗಳ ಪಾತ್ರ ಬಹಳ ಮುಖ್ಯ ಎಂದು ತಿಳಿಸಿದರು.
ಕೃಷಿ, ಸಣ್ಣ, ಮಧ್ಯಮ ಕೈಗಾರಿಕೆಗಳ ವಲಯ, ಗೃಹ, ವಾಹನ, ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ನಿಗದಿಪಡಿಸಿರುವ ಸಾಲದ ಗುರಿಯನ್ನು ನಿಗದಿತ ಕಾಲಾವಧಿಯೊಳಗೆ ತಲುಪಲು ಜಿಲ್ಲೆಯ ಎಲ್ಲಾ ಬ್ಯಾಂಕ್ಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಹದೇವ್ ಜೋಶಿ ಮಾತನಾಡಿ, ಬ್ಯಾಂಕ್ಗಳ ಮೇಲೆ ಸಾರ್ವಜನಿಕರು ಅಪಾರವಾದ ವಿಶ್ವಾಸವನ್ನು ಇಟ್ಟಿದ್ದು, ಅದನ್ನು ಉಳಿಸಿಕೊಳ್ಳಲು ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಇದೇ ವೇಳೆ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ತಯಾರಿಸಿದ್ದ ಜಿಲ್ಲಾ ಸಾಲ ಯೋಜನೆ ಕಿರುಹೊತ್ತಿಗೆಯನ್ನು ಅತಿಥಿಗಳು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಆರ್ಬಿಐ ಅಧಿಕಾರಿ ಶೀಲ್ ಪ್ರಿಯಾ ಗೌತಮ್ , ನಬಾರ್ಡ್ ಬ್ಯಾಂಕ್ ಅಧಿಕಾರಿ ಸಾಕೇತ್ ಕುಮಾರ್, ಆರ್ಸೆಟಿ ತರಬೇತಿ ಸಂಸ್ಥೆ ನಿರ್ದೇಶಕ ಯಲ್ಲೇಶ್ ಸಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ : ಕೋಲಾರ ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿ.ಪಂ ಸಿಇಓ ಡಾ.ಪ್ರವೀಣ್ ಪಿ ಬಾಗೇವಾಡಿ ಅವರು ಜಿಲ್ಲಾ ಸಾಲ ಯೋಜನೆ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್