ಬೆಂಗಳೂರು, 28 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಎಸ್.ಈ. ಸುಧೀಂದ್ರ ಅವರು ಇಂದು ಭೇಟಿ ಮಾಡಿ ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಈ ಭೇಟಿಯ ಸಂದರ್ಭದಲ್ಲಿ 2024- 25 ನೇ ಸಾಲಿನಲ್ಲಿ ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಯೋಜನೆಗಳ ವಿವರವಾದ ವರದಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾವು ಮಂಡಳಿಯಲ್ಲಿ ಕಳೆದ ಒಂದು ವರ್ಷದಲ್ಲಿ ಜೈವಿಕ ಇಂಧನ ಕ್ಷೇತ್ರದ ಉನ್ನತೀಕರಣ ಹಾಗೂ ವಾಣಿಜ್ಯೀಕರಣದತ್ತ ಕೊಂಡೊಯ್ಯಲು ಹಲವಾರು ಕಾರ್ಯಯೋಜನೆಗಳು, ಅನುಷ್ಟಾನ ಮಾರ್ಗಸೂಚಿಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಪ್ರಯತ್ನಿಸುತ್ತಿರುವುದನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಅದರಲ್ಲೂ ಪ್ರಮುಖವಾಗಿ ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗಾಗಿ ಪೂರಕ ವಾತಾವರಣ ನಿರ್ಮಾಣ ಮಾಡಲು ನೂತನ “ಕರ್ನಾಟಕ ರಾಜ್ಯ ಜೈವಿಕ ಇಂಧನ ನೀತಿ”ಯನ್ನು ರಚನೆ ಕಾರ್ಯ ಪ್ರಗತಿಯಲ್ಲಿರುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ನೂತನ ಜೈವಿಕ ಇಂಧನ ನೀತಿಯಲ್ಲಿ ಬಂಡವಾಳ ಹೂಡಿಕೆಗಾಗಿ ಪ್ರಸ್ತಾಪಿಸಲಾಗಿರುವ ಪ್ರೋತ್ಸಾಹಕ ಅಂಶ ಗಳನ್ನು ಸರ್ಕಾರದಿಂದ ಅನುಮೋದಿಸಲ್ಪಟ್ಟು ಘೋಷಿಸಿದರೆ ಮುಂದಿನ 05 ವರ್ಷಗಳಲ್ಲಿ 1.00 ಲಕ್ಷ ಕೋಟಿಗೂ ಅಧಿಕ ಬಂಡವಾಳ ಹೂಡಿಕೆಯಾಗಲಿದೆ ಎಂಬ ಆಶಾಭಾವನೆಯನ್ನು ಹೊಂದಿರುವುದನ್ನು ಅಂಕಿ ಅಂಶಗಳ ಸಮೇತ ವಿವರಿಸಿದರು.
ಮಂಡಳಿಯ ಅಧ್ಯಕ್ಷನಾಗಿ ಕೈಗೊಂಡಿರುವ ಕಾರ್ಯಯೋಜನೆಗಳು, ಆಯೋಜಿಸಲಾಗಿರುವ ಕಾರ್ಯಕ್ರಮಗಳು, ವಿಶ್ವವಿದ್ಯಾಲಯಗಳು, ಜೈವಿಕ ಇಂಧನ ಕ್ಷೇತ್ರದಲ್ಲಿ ತೊಡಗಿರುವ ಉದ್ದಿಮೆದಾರರು ಹಾಗೂ ಕೈಗಾರಿಕೆಗಳಿಗೆ ಭೇಟಿ ನೀಡಿ,ಚರ್ಚಿಸಲಾಗಿರುವ ಹಲವಾರು ವಾಸ್ತವಿಕ ಸ್ಥಿತಿಗತಿಗಳು ಸೇರಿದಂತೆ ಪ್ರಸ್ತುತ ಸಾಲಿನಲ್ಲಿ ಮಂಡಳಿಗೆ ಹೆಚ್ಚಿನ ಅನುದಾನ ಅಗತ್ಯತೆ ಇರುವುದನ್ನು ವಿವರಿಸುತ್ತಾ ಮುಖ್ಯಮಂತ್ರಿ ಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆಗಾಗಿ ಮನವಿ ಮಾಡಿದರು.
ಮುಖ್ಯಮಂತ್ರಿಗಳು ವರದಿಯನ್ನು ಪರಿಶೀಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಅಧ್ಯಕ್ಷರು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಳಿಯ ಅಧಿಕಾರಿಗಳು, ಮಂಡಳಿಯ ಮತ್ತು ಅಧ್ಯಕ್ಷರ ಸಲಹೆಗಾರರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa