ಶಾಂತಿಯುತ ಬಕ್ರೀದ್ ಹಬ್ಬ : ಜಿಲ್ಲಾಧಿಕಾರಿ ನಿತೀಶ್ ಕೆ.
ರಾಯಚೂರು, 03 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಜೂನ್ 7 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವು ಮತ್ತು ಒಂಟೆಗಳ ವಧೆ ಮತ್ತು ಸಾಗಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್
ಬಕ್ರೀದ್ ಹಬ್ಬ ಶಾಂತಿಯುತವಾಗಿ ನಡೆಯಲಿ: ಜಿಲ್ಲಾಧಿಕಾರಿ ನಿತೀಶ್ ಕೆ.


ರಾಯಚೂರು, 03 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಜೂನ್ 7 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವು ಮತ್ತು ಒಂಟೆಗಳ ವಧೆ ಮತ್ತು ಸಾಗಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ಜೂನ್ 03ರ ಮಂಗಳವಾರ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಬಕ್ರೀದ್ ಹಬ್ಬದ ಹಿನ್ನೆಲೆಯ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧಿನಿಯಮ 2020 ಜಾರಿಯಲ್ಲಿದ್ದು ಎಲ್ಲಾ ವಯಸ್ಸಿನ ಹಸು, ಹಸು ಕರು, ಗೂಳಿ, ಎತ್ತು ಮತ್ತು 13 ವರ್ಷದೊಳಗಿನ ಎಮ್ಮ ಕೋಣ ವಧೆಯನ್ನು ನಿಷೇಧಿಸಲಾಗಿದ್ದು, ಈ ಬಗ್ಗೆ ಧ್ವನಿವರ್ಧಕ ಬಳಸಿ ಅಲ್ಪಸಂಖ್ಯಾತರ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ತಿಳಿವಳಿಕೆ ಮೂಡಿಸಬೇಕು. ರಾಯಚೂರ ಮಹಾನಗರ ಪಾಲಿಕೆ ಸೇರಿದಂತೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆ ನಡೆಸಿ ಕಾಯಿದೆ ಬಗ್ಗೆ ಅರಿವು ಮೂಡಿಸಿ ಗೋಹತ್ಯೆ ತಡೆಗಟ್ಟುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ರಾಯಚೂರ ಜಿಲ್ಲೆಯ ರಾಯಚೂರ, ಸಿಂಧನೂರ, ಲಿಂಗಸೂರ, ಮಾನವಿ, ಮಸ್ಕಿ, ಶಿರವಾರ, ದೇವದುರ್ಗದ ನಗರ ಪಟ್ಟಣ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಹಬ್ಬದ ದಿನಗಳಲ್ಲಿ ಉತ್ಪತ್ತಿಯಾಗುವ ಪ್ರಾಣಿತ್ಯಾಜ್ಯ ವಾರ್ಡವಾರು ಸಂಗ್ರಹಿಸಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಗಳಲ್ಲಿ ಮಾಲಿನ್ಯ ನಿಯಂತ್ರಣ ಇಲಾಖೆಯ ಸಹಯೋಗದೊಂದಿಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಅನಧಿಕೃತ ಅಕ್ರಮ ಒಂಟೆ ಗೋ ಹತ್ಯೆ ತಡೆಗಟ್ಟಲು ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯತಗಳ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಮತ್ತು ಆಯಾ ಗ್ರಾಮಗಳ ಗ್ರಾಮ ಆಡಳಿತ ಅಧಿಕಾರಿಗಳು ಒಗ್ಗೂಡಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಪಶು ಚಿಕಿತ್ಸಾಲಯಗಳ ಅಧಿಕಾರಿ ಸಿಬ್ಬಂದಿಯೊಂದಿಗೆ ಸಭೆ ನಡೆಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಾರಿಗೆ ಇಲಾಖೆಯಿಂದ ಜಿಲ್ಲೆಯ ಎಲ್ಲಾ ಚೆಕ್ ಪೆÇೀಸ್ಟಗಳಲ್ಲಿ ಹಾಗೂ ಸೂಕ್ಷ್ಮ ಅಥವಾ ಅನುಮಾನಸ್ಪದ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಿ ಅನಧಿಕೃತ ಒಂಟೆ ಅಥವಾ ಜಾನುವಾರು ಸಾಗಣೆ ವಾಹನಗಳ ತಪಾಸಣೆ ನಡೆಸುವಂತೆ ಹಾಗೂ ಒಂದು ವೇಳೆ ಅಂತಹ ವಾಹನಗಳು ಕಂಡುಬಂದಲ್ಲಿ ಕಾನೂನು ರೀತ್ಯ ಕ್ರಮವಹಿಸಿ ವಾಹನದಲ್ಲಿರುವ ಒಂಟೆ ಅಥವಾ ಜಾನುವಾರುಗಳನ್ನು ರಕ್ಷಿಸಿ ಪೆÇೀಲಿಸ್ ಹಾಗೂ ಪಶುಸಂಗೋಪನೆ ಇಲಾಖೆಯ ಸಹಯೋಗದೊಂದಿಗೆ ಗೋಶಾಲೆಗಳಿಗೆ ಸೇರಿಸುವ ಕಾರ್ಯವನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬಕ್ರಿದ್ ಹಬ್ಬ ಮುಕ್ತಾಯವಾಗುವವರೆಗೆ ಎಲ್ಲ ತಾಲೂಕುಗಳಲ್ಲಿ ನಡೆಯುವ ಜಾನುವಾರು ಸಂತೆಗಳಲ್ಲಿ ಕಂದಾಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ, ಪಿಡಿಓ, ಎಪಿಎಂಸಿ, ಪಶುಪಾಲನಾ ಇಲಾಖೆಯ ಅಧಿಕಾರಿಗಳು ಹಾಜರಿದ್ದು ಸಂತೆ ಮುಗಿಯುವವರೆಗೆ ಜಾನುವಾರುಗಳ ಸಾಗಣೆ, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರನ್ವಯ ಹಾಗೂ ಇತರೆ ಕಾಯ್ದೆಗಳಲ್ಲಿನ ಅಂಶಗಳು ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ಮಾತನಾಡಿ, ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಅಧಿನಿಯಮ 2020 ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇದನ್ನು ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಅರಿಯಬೇಕು. ಸಾರಿಗೆ ಮತ್ತು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು. ವಿಶೇಷವಾಗಿ ಗಡಿಭಾಗಗಳಲ್ಲಿ ಅನಧಿಕೃತ ಒಂಟೆ ಜಾನುವಾರುಗಳ ಸಾಗಣೆ ವಾಹನಗಳ ತಪಾಸಣೆ ಮತ್ತು ರಕ್ಷಣಾ ಕಾರ್ಯವನ್ನು ಕಾನೂನರಿತ್ಯ ನಡೆಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬೀನ್ ಮೋಹಪಾತ್ರ ಅವರು ಮಾತನಾಡಿ, ಬಕ್ರಿದ್ ಹಬ್ಬದ ಪ್ರಯುಕ್ತ ಉತ್ಪತ್ತಿಯಾಗುವ ತ್ಯಾಜ್ಯವನ್ನು ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ನಿಯಮಾನುಸಾರ ಕಸಾಯಿ ಖಾನೆಗಳಿಂದ ಮನೆಮನೆಗಳಿಂದ ಸಂಗ್ರಹಿಸಿ ಆಟೋ ಟಿಪ್ಪರ್ ಮತ್ತು ಟ್ರಾಕ್ಟರಗಳ ಮೂಲಕ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಬೇಕು. ಈ ತ್ಯಾಜ್ಯವು ಸಾರ್ವಜನಿಕರಿಗೆ ಕಾಣದಂತೆ ರಸ್ತೆ ಮೇಲೆ ಸೋರದಂತೆ ತಾಡಪಲ್ ಪ್ಲಾಸ್ಟಿಕ್ ಹೊದಿಕೆಯಿಂದ ಮುಚ್ಚಿ ಸಾಗಣೆ ಮಾಡಬೇಕು. ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಿಯಮಾನುಸಾರ ಈ ತ್ಯಾಜ್ಯ ವಿಲೇ ಮಾಡಲು ಬೇಕಾದ ಎಲ್ಲ ಸಲಕರಣೆಗಳನ್ನು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಪಶ್ಚಿಮ ವೃತ್ತದ ಸಿಪಿಐ ನಿಂಗಪ್ಪ ಎನ್.ಆರ್., ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಅಶೋಕ ಕೋಲ್ಕಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮೀಲಿನ್ ಕುಮಾರ್, ವಾರ್ತಾ ಇಲಾಖೆಯ ಗವಿಸಿದ್ದಪ್ಪ ಸೇರಿದಂತೆ ಜಿಲ್ಲೆಯ ತಾಲೂಕಿನ ತಹಶೀಲ್ದಾರರು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ಮುಖ್ಯಪಶು ವೈದ್ಯಾಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande