ಕೊಪ್ಪಳ, 04 ಜೂನ್ (ಹಿ.ಸ.) :
ಆ್ಯಂಕರ್ : ವಿಶ್ವ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇದೇ ಜೂ. 12 ರಂದು ಪ್ರತಿಜ್ಞಾವಿಧಿ ಬೋಧಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯು 14 ವರ್ಷದ ಒಳಗಿನ ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಿರುತ್ತದೆ. ಹಾಗೆಯೇ 14 ರಿಂದ 18 ವರ್ಷದ ಮಕ್ಕಳು ಬಾಲಕಾರ್ಮಿಕರಾಗಿ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಯುವುದನ್ನು ನಿಷೇಧಿಸಿ ಅಪಾಯಕಾರಿ ಅಲ್ಲದ ಕ್ಷೇತ್ರಗಳನ್ನು ನಿಯಂತ್ರಿಸುವಂತೆ ತಿಳಿಸುತ್ತದೆ. ದಂಡದ ಪ್ರಮಾಣವನ್ನು ಐವತ್ತು ಸಾವಿರದವರೆಗೆ ವಿಸ್ತರಿಸಲಾಗಿದೆ.
ಎಲ್ಲಾ ಪ್ರಕರಣಗಳಲ್ಲೂ ಪೊಲೀಸ್ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿದೆ. ಇದಕ್ಕೆ ಪೂರಕವೆಂಬಂತೆ ನಿಯಮಾವಳಿ ಮತ್ತು ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಪದ್ದತಿಯನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡಲು ಕಾರ್ಯಸೂಚಿಯನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಬಿಡುಗಡೆ ಮಾಡಿದೆ. ರಾಜ್ಯ ಕಾರ್ಮಿಕ ಇಲಾಖೆಯು ಬಾಲ ಮತ್ತು ಕಿಶೋರಾವಸ್ಥೆ ಕಾರ್ಮಿಕ ಮುಕ್ತ ವಲಯಗಳನ್ನಾಗಿಸುವ ಕಾರ್ಯಸೂಚಿಯನ್ನು ಹೊರತಂದಿದೆ. ಇವುಗಳ ಪರಿಣಾಮಕಾರಿ ಅನುಷ್ಠಾನ ಅವಶ್ಯಕ. ಈ ನಿಟ್ಟಿನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಶ್ರಮಿಸುತ್ತಿರುವ ಎಲ್ಲಾ ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಜವಾಬ್ದಾರಿ ಮಹತ್ವದ್ದಾಗಿದೆ. ಎಲ್ಲರೂ ಒಗ್ಗೂಡಿ ಸಹಭಾಗಿತ್ವದಿಂದ ವಿವಿಧ ಕಾರ್ಯತಂತ್ರಗಳನ್ನು ಅನುಷ್ಠಾನ ಮಾಡಿದರೆ ಮಾತ್ರ ಮಕ್ಕಳು ಬಾಲಕಾರ್ಮಿಕ ಪದ್ಧತಿಯತ್ತ ಹೋಗುವುದನ್ನು ತಡೆದು ಬಾಲಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆ ಸಾಧ್ಯ.
ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ಸಂಘಟನೆ, ವಿಶ್ವಸಂಸ್ಥೆ ಹಾಗೂ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕುವುದರೊಂದಿಗೆ ಕರ್ನಾಟಕವನ್ನು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪದ್ಧತಿ ಮುಕ್ತ ಕರ್ನಾಟಕವನ್ನಾಗಿಸಲು ಶ್ರಮಿಸುತ್ತಿದೆ. ಹಾಗಾಗಿ ಈ ವರ್ಷ “ಪ್ರಗತಿ ಸ್ಪಷ್ಟವಾಗಿದೆ, ಆದರೆ ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ, ಪ್ರಯತ್ನಗಳನ್ನು ವೇಗಗೊಳಿಸೋಣ””(Profress is clear, but there's more to do let's speed up effort) ಎಂಬ ಧ್ಯೇಯ ವಾಕ್ಯದೊಂದಿಗೆ ಹಾಗೂ ವಿಶ್ವಸಂಸ್ಥೆಯ ಮಾರ್ಗಸೂಚಿಯಂತೆ ಈ ಪದ್ಧತಿಯನ್ನು ಕೊನೆಗಾಣಿಸಲು ಸಮಾರೋಪಾದಿಯಲ್ಲಿ ಕ್ರಮ ಜರುಗಿಸುವುದು ಅತ್ಯಂತ ಅಗತ್ಯ. ಕೊಪ್ಪಳ ಜಿಲ್ಲೆಯಲ್ಲಿ ಈ ಆಂದೋಲನದಲ್ಲಿ ತಾವೆಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿದೆ. ಆದ್ದರಿಂದ ಇದೇ ಜೂನ್ 12 ರಂದು ನಾವೆಲ್ಲರೂ ವಿಶ್ವ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಜಿಲ್ಲಾ ಮಟ್ಟದಿಂದ ಪ್ರತಿಯೊಂದು ಗ್ರಾಮ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿದೆ.
ಜಿಲ್ಲಾ ಮಟ್ಟದ ಕಾರ್ಯಕ್ರಮ ;
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಜಾಗೃತಿ ಜಾಥಾ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ತಾಲ್ಲೂಕು ಮಟ್ಟದ ಕಾರ್ಯಕ್ರಮಗಳು ;
ಜಿಲ್ಲೆಯ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕುಕನೂರು, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕು ಕೇಂದ್ರಗಳಲ್ಲಿ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಆಯಾ ತಹಶೀಲ್ದಾರರು, ತಾಲ್ಲೂಕು ಪಂಚಾಯತ್, ಪೊಲೀಸ್, ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಶಿಕ್ಷಣ, ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ತಾಲ್ಲೂಕು ಮಟ್ಟದಲ್ಲಿ ಜಾಗೃತಿ ಜಾಥಾ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಗ್ರಾಮ ಪಂಚಾಯತ್ / ವಾರ್ಡ್ ಮಟ್ಟದ ಕಾರ್ಯಕ್ರಮಗಳು ;
ಕೊಪ್ಪಳ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದ್ದು, ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರು ಎಲ್ಲಾ ಮಕ್ಕಳಿಗೂ ಮತ್ತು ಅವರಪೋಷಕರಿಗೆ ಶಾಲೆಯಲ್ಲಿ ಸಮಾವೇಶ ಸೇರಿಸಿ ಪ್ರತಿಜ್ಞಾ ವಿಧಿ ಬೋಧಿಸುವುದು. ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದಾಗುವ ದುಷ್ಪರಿಣಾಮದ ಬಗ್ಗೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಂದಲೇ ಕಿರುನಾಟಕ, ಜಾಗೃತಿ ಗೀತೆಗಳನ್ನು, ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಪ್ರತಿ ಪಂಚಾಯತ್ ಮತ್ತು ವಾರ್ಡ್ಗಳಲ್ಲಿ ‘ಮಕ್ಕಳ ರಕ್ಷಣಾ ಸಮಿತಿ’ ಸಭೆಯನ್ನು ಆಯೋಜಿಸಿ, ಸಭೆಯಲ್ಲಿ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಮುಂದಿಟ್ಟ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸುವುದು. ಎಲ್ಲಾ ಶಾಲೆಗಳಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಭೆಯನ್ನು ಆಯೋಜಿಸಿ 2024-2025 ರಲ್ಲಿ ನಡೆದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯಲ್ಲಿ ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳನ್ನು ಮರಳಿ ಶಾಲೆಗೆ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕವಾಗಿದೆ.
ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯನ್ನು ಆಯೋಜಿಸಿ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಚರ್ಚಿಸುವುದು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎನ್.ಆರ್.ಇ.ಜಿ ಕುಟುಂಬ ಮತ್ತು ಸ್ವ-ಸಹಾಯ ಸಂಘಗಳನ್ನು ಬಾಲ ಕಾರ್ಮಿಕ ಮುಕ್ತ ಕುಟುಂಬಗಳಾಗಿ ಘೋಷಿಸಲು ಕ್ರಮ ಕೈಗೊಳ್ಳಲು ತಿಳಿಸಬೇಕು.
ಎಲ್ಲಾ ಕಾರ್ಮಿಕ ಸಂಘಟನೆಗಳು, ಮಾಲೀಕರ ಸಂಘಟನೆಗಳು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದಂದು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಎಲ್ಲಾ ಸರಕಾರಿ ಕಛೇರಿಗಳಲ್ಲಿ ಜೂ. 12 ರಂದು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಿ, ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್