ಬೆಂಗಳೂರು, 4 ಜೂನ್ (ಹಿ.ಸ.):
ಆ್ಯಂಕರ್:ಐಪಿಎಲ್ 2025ರ 18ನೇ ಆವೃತ್ತಿಯಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಬೆಂಗಳೂರಿನಲ್ಲಿ ದುಃಖದಲ್ಲಿ ಮುಕ್ತಾಯಗೊಂಡಿದೆ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ವಿಜೃಂಭಣೆಯ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 10 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ, ೨೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ವಿಜಯೋತ್ಸವ ಸಂಭ್ರಮದಲ್ಲಿ ಆಟಗಾರರು ನಗರದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸುವ ಮುನ್ನ , ಸಾವಿರಾರು ಅಭಿಮಾನಿಗಳು ಕ್ರೀಡಾಂಗಣದ ಸ್ಥಳಕ್ಕೆ ಹರಿದುಬಂದಿದ್ದರು. ಸ್ಟೇಡಿಯಂ ಒಳಗೆ ಪ್ರವೇಶ ಪಡೆಯಲು ನೂಕುನುಗ್ಗಲಿನಿಂದಾಗಿ ನಿಯಂತ್ರಣ ತಪ್ಪಿ, ಅರಾಜಕತೆ ಮಿತಿಮೀರಿದ್ದು, ಅಂತಿಮವಾಗಿ ಕಾಲ್ತುಳಿತಕ್ಕೆ ದಾರಿ ನೀಡಿತು.
ನೂಕುನುಗ್ಗಲಿನಲ್ಲಿ ಅಪಾರ ಜನರ ಸಮ್ಮುಖದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
೨೦ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅವರಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಬೌರಿಂಗ್ ಮತ್ತು ಲೇಡಿ ಕರ್ಜನ್, ವೈದೇಹಿ ಸೂಪರ್ ಸ್ಪೆಷಾಲಿಟಿ ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆ ಎದುರು ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆಯ ಸಂದರ್ಭದಲ್ಲಿ ಕ್ರೀಡಾಂಗಣದ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಜನಸಾಗರ ಹರಿದು ಬಂದಿದ್ದರಿಂದ, ವಾಹನಗಳ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಪೊಲೀಸರಿಗೆ ನಿರೀಕ್ಷೆಯ ಪ್ರಕಾರ ಸಹಕಾರ ದೊರಕದೆ, ಲಾಠಿಚಾರ್ಜ್ ನಡೆಸಬೇಕಾಯಿತು. ಈ ವೇಳೆ ಹಲವರಿಗೆ ತೀವ್ರ ಗಾಯಗಳಾಗಿವೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa