ಬೆಂಗಳೂರು, 5 ಜೂನ್ (ಹಿ.ಸ.) :
ಆ್ಯಂಕರ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಕಪ್ ಗೆದ್ದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆಗೆ ಸಂಬಂಧ ಕರ್ನಾಟಕ ಉಚ್ಚ ನ್ಯಾಯಾಲಯ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಪರಿಗಣಿಸಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ, ಸ್ವಯಂಪ್ರೇರಿತ ಪ್ರಕರಣ ಕುರಿತು ವಿಚಾರಣೆ ನಡೆಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಮುಂದಿನ ಮಂಗಳವಾರದ ಒಳಗಾಗಿ ಪ್ರಕರಣ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕು. ವರದಿಯನ್ನು ಆಧರಿಸಿ ಮುಂದಿನ ಆದೇಶಗಳನ್ನು ನೀಡಲಾಗುವುದು ಎಂದು ತಿಳಿಸಿ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa