ರಾಯಚೂರು, 09 ಜೂನ್ (ಹಿ.ಸ.) :
ಆ್ಯಂಕರ್ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಸರ್ಕಾರದ ಆದೇಶದಂತೆ ಪ್ರವರ್ಗ-1ರ 6(ಎ) ಯಿಂದ 6(ಎ.ಕೆ)ವರೆಗೆ ಬರುವ ಬೆಸ್ತ, ಅಂಬಿಗ, ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ ಜಾರಿಗೊಳಿಸುತ್ತಿರುವ ನಾನಾ ಯೋಜನೆಗಳ ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳು: ಅರಿವು ಶೈಕ್ಷಣಿಕ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಪುನರ್), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯ ನೀಡಲಾಗುವುದು.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆಯಾಗಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ ಅಥವಾ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25ನೆ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ನಿಗಮವು ಜಾರಿಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ಮತ್ತು ನಿರ್ದೇಶಕ ಮಂಡಳಿ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರು ಸಹ ಆನ್ಲೈನ್ಲ್ಲಿ ಅರ್ಜಿ ಸಲ್ಲಿಸುವುದು ಅಗತ್ಯವಾಗಿದೆ.
ಅರ್ಹ ಫಲಾಪೇಕ್ಷಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ: http://ambigaradevelopment.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ: 080-22864099 ಅಥವಾ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 08532-250440ಗೆ ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್