ಬಳ್ಳಾರಿ, 09 ಜೂನ್ (ಹಿ.ಸ.) :
ಆ್ಯಂಕರ್ : ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್ದಾಸ್ ಅವರ ಏಕ ಸದಸ್ಯ ಆಯೋಗದ ನೇತೃತ್ವದಲ್ಲಿ ಒಳಮೀಸಲಾತಿಗಾಗಿ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಜೂನ್ 22 ರ ವರೆಗೆ ವಿಸ್ತರಿಸಲಾಗಿದೆ.
ಈಗಾಗಲೇ ಜೂನ್ 08 ವರೆಗೆ ಸಮೀಕ್ಷೆ ಕೈಗೊಂಡಿದ್ದು, ಸಮೀಕ್ಷೆಯು ಪ್ರಗತಿಪಥದಲ್ಲಿದ್ದು, ಕೆಲವು ಕುಟುಂಬಗಳು ವಲಸೆ ಹೋಗಿರುವ ಪ್ರಯುಕ್ತ ಪರಿಶಿಷ್ಟ ಜಾತಿಗೆ ಸೇರಿದ ಸಂಘ-ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಿಸಬೇಕು ಎಂದು ಮನವಿ ಸಲ್ಲಿಸಿರುತ್ತಾರೆ. ಆದರೆ ಈಗಾಗಲೇ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ.
ಹೀಗಾಗಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಪರಿಶಿಷ್ಟ ಜಾತಿ ಕುಟುಂಬದವರು ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್ ಮತ್ತು ಗ್ರಾಮಒನ್ ಕೇಂದ್ರಗಳಿಗೆ ಭೇಟಿ ನೀಡಿ ಜೂನ್ 22ರ ವರೆಗೂ ತಮ್ಮ ಮಾಹಿತಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾಹಿತಿ ನಮೂದಿಸಲು ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆ ಅವಶ್ಯಕವಾಗಿದೆ.
ಆನ್ಲೈನ್ ಲಿಂಕ್ https://schedulecastesurvey.karnataka.gov.in/selfdeclaration - ಮೂಲಕ ಸಹ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು ಜೂ.22 ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್