ಹೊಸಪೇಟೆ, 17 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲೆಯ 18 ಹೋಬಳಿಗಳಲ್ಲಿ ಉತ್ತಮ ಮಳೆಯಾಗಿದ್ದು, 15 ಹೋಬಳಿಗಳಲ್ಲಿ ಪ್ರಮುಖವಾಗಿ ಮೆಕ್ಕೆಜೋಳ ಬಿತ್ತನೆಯಾಗಿರುತ್ತದೆ. ಪ್ರತಿ ವರ್ಷ 1.98 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗುತ್ತಿದ್ದು, ಈ ವರ್ಷ ಮುಂಗಾರುನಲ್ಲಿ 2.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿರುತ್ತದೆ.
ಹಾಲಿ ಮೆಕ್ಕೆಜೋಳ ಬೆಳೆಯಲ್ಲಿ ಯೂರಿಯಾ ರಸಗೊಬ್ಬರವನ್ನು ಮೇಲುಗೊಬ್ಬರವಾಗಿ ನೀಡಲಾಗುತ್ತಿದ್ದು, ಹೆಚ್ಚಿನ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯ ಬಿತ್ತನೆಯಾಗಿರುವುದರಿಂದ ಯೂರಿಯಾ ರಸಗೊಬ್ಬರದ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 26,293 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರದ ಬೇಡಿಕೆಯಿದ್ದು, ಇಲ್ಲಿಯವರೆಗೆ 30,059 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಸರಬರಾಜಾಗಿರುತ್ತದೆ. ಈಗಾಗಲೇ ಬೇಡಿಕೆಗಿಂತ ಹೆಚ್ಚಿನ ಅಂದಾಜು 4,000 ಮೆಟ್ರಿಕ್ ಟನ್ಗಳಷ್ಟು ಯೂರಿಯಾ ರಸಗೊಬ್ಬರ ಸರಬರಾಜಾಗಿರುತ್ತದೆ.
ಮುಂದಿನ 12 ದಿನಗಳೊಳಗೆ 2,500 ಮೆಟ್ರಿಕ್ ಟನ್ಗಳಷ್ಟು ಯೂರಿಯಾ ರಸಗೊಬ್ಬರವು ವಿವಿಧ ಸರಬರಾಜು ಕಂಪನಿಗಳಿಂದ ಪೂರೈಕೆಯಾಗಲಿದೆ. ಆದ್ದರಿಂದ ರೈತರು ಯಾವುದೇ ಉಹಾಪೋಹಾಗಳಿಗೆ ಕಿವಿ ಕೊಡಬಾರದೆಂದು ಮನವಿ ಮಾಡಲಾಗಿದೆ.
ಹೆಚ್ಚಿನ ಧರದಲ್ಲಿ ಮಾರಾಟಗಾರರು ಮಾರಾಟ ಮಾಡಿದಲ್ಲಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ದೂರು ನೀಡಬಹುದು.
ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿ.ಎ.ಪಿ ರಸಗೊಬ್ಬರಗಳನ್ನು ಸಹ ಮೆಕ್ಕೆಜೋಳದ ಬೆಳೆಗೆ ಬಳಸಬಹುದೆಂದು ರೈತರಿಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್