ನವದೆಹಲಿ, 21 ಜುಲೈ (ಹಿ.ಸ.):
ಆ್ಯಂಕರ್:ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ವಿರುದ್ಧ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಸುಪ್ರೀಂ ಕೋರ್ಟ್ನಿಂದ ನಿರಾಳತೆ ದೊರೆತಿದೆ. ಕರ್ನಾಟಕ ಹೈಕೋರ್ಟ್ ಈ ಮೊದಲು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ನೇತೃತ್ವದ ಪೀಠ, ದಯವಿಟ್ಟು ನಾವು ಬಾಯಿ ತೆರೆಯುವಂತೆ ಮಾಡಬೇಡಿ. ಇಲ್ಲವಾದರೆ, ನಾವು ಇಡಿಯ ಕುರಿತು ಕೆಲ ಕಟು ಟೀಕೆಗಳನ್ನು ಮಾಡಬೇಕಾಗುತ್ತದೆ. ರಾಜಕೀಯ ಪೈಪೋಟಿ ಮತದಾರರ ನಡುವೆ ನಡೆಯಲಿ, ಇಡಿಯನ್ನು ಏಕೆ ಬಳಸಲಾಗುತ್ತಿದೆ? ಎಂದು ತೀವ್ರ ಶಬ್ದಗಳಲ್ಲಿ ಎಚ್ಚರಿಕೆ ನೀಡಿತು.
ಮಹಾರಾಷ್ಟ್ರದ ಅನುಭವವನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿ, ಇಡಿಯನ್ನು ರಾಜಕೀಯ ಸಾಧನವಾಗಿ ಬಳಸಲಾಗುತ್ತಿದೆ ಎಂಬ ಆಪಾದನೆಗಳನ್ನು ಪರೋಕ್ಷವಾಗಿ ತಳ್ಳಿಹಾಕಿದರು. ಏಕಸದಸ್ಯ ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರ ತೀರ್ಪಿನಲ್ಲಿ ಯಾವುದೇ ದೋಷವಿಲ್ಲವೆಂದು ಸ್ಪಷ್ಟಪಡಿಸಿದ ಪೀಠ, ಇಡಿಯ ಮೇಲ್ಮನವಿಯನ್ನು ವಜಾಗೊಳಿಸುತ್ತೇವೆ ಎಂದು ತೀರ್ಪು ನೀಡಿತು.
ಈ ಮೂಲಕ, ಮೂಡಾ ಹಗರಣ ಸಂಬಂಧ ಮುಖ್ಯಮಂತ್ರಿ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ತನಿಖಾ ಕಾರ್ಯಚಟುವಟಿಕೆಗಳಿಗೆ ತಾತ್ಕಾಲಿಕ ತಡೆ ಸಿಕ್ಕಂತಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa