ಬೆಂಗಳೂರು, 27 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮಳೆ ಮುಂದುವರೆದಿದ್ದು ನಾನಾ ಅವಾಂತರಗಳಿಗೆ ಕಾರಣವಾಗಿದೆ. ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಲಾಗಿದೆ.
ಗಾಳಿಯ ವೇಗ ಗಂಟೆಗೆ 40-50 ಕಿಮೀ ಗಾತ್ರದಲ್ಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 766 (ಇ) ಭಾಗಶಃ ಹಾನಿಗೊಂಡಿದೆ. ಇಲ್ಲಿ 150 ಅಡಿಗೂ ಅಧಿಕ ಗಾತ್ರದ ಗುಡ್ಡ ಕುಸಿದಿದೆ. ಹೀಗಾಗಿ ಸ್ಥಳೀಯ ಆಡಳಿತ ಲಘು ವಾಹನಗಳಿಗೆ ಮಾತ್ರವೇ ಸಂಚಾರಕ್ಕೆ ಅವಕಾಶ ನೀಡಿದೆ.
ಮಲೆನಾಡಿನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಶೃಂಗೇರಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾರದಾಂಬೆ ದೇವಸ್ಥಾನಕ್ಕೆ ಆಗಮಿಸಿರುವ ಭಕ್ತರು ಕಂಗಾಲಾಗಿದ್ದಾರೆ. ತುಂಗಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಕಾರುಗಳು ಮುಳುಗಡೆಯಾಗಿದ್ದು, ಶೃಂಗೇರಿಯ ಗಾಂಧಿ ಮೈದಾನದಲ್ಲಿ ನಿಂತಿದ್ದ ವಾಹನಗಳು ಜಲಾವೃತಗೊಂಡಿವೆ.
ತುಂಗಾ-ಭದ್ರಾ ನದಿಗಳ ಇಕ್ಕೆಲದ ತೋಟಗಳು ನೀರಿನಲ್ಲಿ ಮುಳುಗಿದ್ದು, ಸಾರ್ವಜನಿಕರು ಎಚ್ಚರಿಕೆಯ ವಹಿಸುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa