ಗದಗ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪ್ರಭುವಿನೆಡೆಗೆ ಪ್ರಭುತ್ವ' ಜಾರಿಗೆ ತರಲಾಗಿದ್ದು, ಪ್ರಜಾಪ್ರಭುತ್ವದ ಆಡಳಿತದಲ್ಲಿ ಪ್ರಜೆಗಳಿಗೆ ತೀವ್ರವಾಗಿ ಸ್ಪಂಧಿಸಿ, ಪಾರದರ್ಶಕತೆ ಮೇರೆಯಲು ಗದಗ ನಗರದಲ್ಲಿ ದೊಡ್ಡ ಹೆಜ್ಜೆ ಇಟ್ಟಿದ್ದೇವೆ. ಸಮಸ್ಯೆಗೆ ಪರಿಹಾರ ತ್ವರಿತಗತಿಯಲ್ಲಿ ಆಗಬೇಕು ಎನ್ನುವ ಉದ್ದೇಶದಿಂದ ದೇಶದಲ್ಲೇ ಪ್ರಥಮ ಬಾರಿಗೆ ಪ್ರಭುವಿನೆಡೆಗೆ ಪ್ರಜಾಪ್ರಭುತ್ವ ಕಾರ್ಯಕ್ರಮ ಮಾಡಲಾಗುತ್ತಿದೆ. ದೇಶದ ಪ್ರಜೆಗೆ ಪ್ರಭುವಿನ ಪಟ್ಟ ಇದೆ. ಪ್ರಜೆಗಳನ್ನು ಅಧಿಕಾರಸ್ಥರನ್ನಾಗಿ ಮಾಡಲಾಗುತ್ತಿದ್ದು, ತ್ವರಿತಗತಿಯಲ್ಲಿ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಇದಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ ತಿಳಿಸಿದರು.
ಗದಗ ನಗರದ ಕೆ. ಎಚ್ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ನಂತರ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ಕಲ್ಪನೆ ದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿದೆ. ಹಿಂದಿನ ಅರಸರ ಕಾಲದಲ್ಲಿ ನಾಗರಿಕರಿಗೆ ತೊಂದರೆ ಆದಾಗ ನ್ಯಾಯದ ಗಂಟೆಯನ್ನು ಭಾರಿಸಬೇಕಾಗಿತ್ತು. ಆದರೆ, ಈಗ ಕಾಲ ಬದಲಾಗಿದ್ದು, ಬಟನ್ ಒತ್ತುವ ಮೂಲಕ ಸಮಸ್ಯೆ ಬಗೆಹರಿಸಿಕೋಳ್ಳಬಹುದು. ಬಟನ್ ಒತ್ತಿದಾಕ್ಷಣ ಕಮಾಂಡ್ ಸೆಂಟರ್ ನವರು ಮಾಹಿತಿ ಪಡೆಯುತ್ತಾರೆ. ಜನರ ದೂರು ಆಲಿಸಿ ತಕ್ಷಣ ಸಂಬಂಧಿಸಿದವರಿಗೆ ಕಳುಹಿಸಿಕೊಡುತ್ತಾರೆ. ಇದರಿಂದ ಕೆಲವೇ ಗಂಟೆಗಳಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಆಗಷ್ಟ್ 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಜವಳಗಲ್ಲಿಯಲ್ಲಿ ಉದ್ಘಾಟನೆ ಮಾಡಿದ್ದೇವೆ ಎಂದು ಹೇಳಿದರು.
ಅಂಜಿಕೆ, ಭಯ ಇಲ್ಲದೆ ದೂರು ನೀಡುವ ವಿನೂತನ ವ್ಯವಸ್ಥೆ ಇದಾಗಿದ್ದು, ಇದರಿಂದ ಆಡಳಿತ ವ್ಯವಸ್ಥೆ ಚುರುಕುಗೋಳ್ಳುತ್ತದೆ. ದೂರು ನೀಡಿದಾಗ ವೆಬ್ ಸೈಟ್ ನಲ್ಲಿ ಕ್ರಿಯೇಟ್ ಆಗುತ್ತದೆ. ಇದರಿಂದ ದೂರು ನೀಡಿದ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ. ಯಾವುದೇ ನಿರ್ಭಿತಿಯಿಲ್ಲದೇ ಡಿಸಿ, ಎಸ್ಪಿ, ಸಿಇಓ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದರು.
ನಗರದಲ್ಲಿನ ಥರ್ಡ್ ಐ ವ್ಯವಸ್ಥೆಯಿಂದ ಮನೆಗಳ್ಳತನ, ಸುಲಿಗೆ, ಅಪಘಾತಗಳು ಇಳಿಮುಖವಾಗಿವೆ. ಪತ್ತೆಹಚ್ಟುವಿಕೆ ಹೆಚ್ಚಾಗಿದೆ. ಕೊಲೆ ಪ್ರಕರಣಗಳನ್ನು ತಕ್ಷಣ ಪತ್ತೆ ಹಚ್ಚಲಾಗುತ್ತಿದ್ದು, ಅಪರಾದ ಪ್ರಕರಣಗಳು ಕಡಿಮೆ ಆಗಿವೆ. ಸಾರಿಗೆ ನಿಯಮ ಉಲ್ಲಂಘನೆ ಪ್ರಕರಣಗಳು ತೀರಾ ಕಡಿಮೆ ಆಗಿವೆ. ಸಮಾಜದ ಹಿತಕ್ಕಾಗಿ ಹೊಸ ಹೊಸ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಜಾರಿಗೆ ತಂದು ಯಶಸ್ವಿಯಾಗುತ್ತಿದ್ದೇವೆ. ಮುಂದಿನ ದಿನಮಾನಗಳಲ್ಲಿಯೂ ಸಾರ್ವಜನಿಕರ ಹಿತಕ್ಕಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಒಟ್ಟಾರೆಯಾಗಿ ಪ್ರಜೆಗಳು ನೆಮ್ಮದಿಯಿಂದ ಬದುಕಬೇಕು ಎನ್ನುವುದೇ ಕರ್ನಾಟಕ ಸರ್ಕಾರದ ಮೂಲ ಉದ್ದೇಶ ಆಗಿದೆ ಎಂದರು.
ಯಾವ ಸಮಸ್ಯೆಗಳಿಗೆ ದೂರು ನೀಡಬಹುದು.!
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಹಿರಿಯ ನಾಗರಿಕರ ರಕ್ಷಣೆ, ಅಕ್ರಮ ಮಧ್ಯ ಮಾರಾಟ, ರಸ್ತೆ ಸುರಕ್ಷತಾ ಕ್ರಮ, ಸಮಾಜ ದ್ರೋಹಿ ಚಟುವಟಿಕೆ, ಅನುಮಾನಾಸ್ಪದ ವಸ್ತುಗಳು, ಜಮೀನು ಹಕ್ಕುಗಳ ಪ್ರಕರಣ, ಪಿಂಚಣಿ ಸಂಬಂಧಿಸಿದ ಪ್ರಕರಣ, ಪಂಚಾಯ್ತಿ ಸೇವೆ.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ, ಜಿಲ್ಲಾಧಿಕಾರಿ ಸಿ. ಎನ್ ಶ್ರೀಧರ್, ಜಿಪಂ ಸಿಇಓ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP