ಬೆಂಗಳೂರು, 2 ಆಗಸ್ಟ್ (ಹಿ.ಸ.):
ಆ್ಯಂಕರ್:
ಕರ್ನಾಟಕದ ಮೈಸೂರು ಜಿಲ್ಲೆಯ ಕೆಆರ್ ನಗರ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಹಾಸನ ಜಿಲ್ಲೆಯ ಜೆಡಿಎಸ್ ಮಾಜಿ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಮೊಮ್ಮಗ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 11 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.
ಪ್ರಕರಣದ ಸಂಕ್ಷಿಪ್ತ ಹಿನ್ನೆಲೆ:
ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2024ರ ಲೋಕಸಭೆ ಚುನಾವಣೆ ಸಂದರ್ಭ ಸರಣಿ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದವು. ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.
ಹೆಚ್ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅವರು ದೋಷಿ ಎಂದು ಸಾಬೀತಾಗಿದ್ದು, ಶಿಕ್ಷೆಯಾಗಿದೆ.ಟ್ಟಾರೆಯಾಗಿ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವೆಸಗಿ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿರುವ ಆರೋಪ ಸಂಬಂಧ ಮೂರು ಪ್ರತ್ಯೇಕ ಪ್ರಕರಣಗಳು ಇನ್ನೂ ವಿಚಾರಣಾ ಹಂತದಲ್ಲಿ ಇವೆ. ಅವುಗಳ ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ.
ಪ್ರಜ್ವಲ್ ರೇವಣ್ಣ ಶಿಕ್ಷೆಯ ವಿವರ:
ಐಪಿಸಿ ಸೆಕ್ಷನ್ 376 (2)(k)ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ
376(2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಜೈಲು, 5 ಲಕ್ಷ ರೂ. ದಂಡ
ಐಪಿಸಿ ಸೆಕ್ಷನ್ 354(A) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
ಐಪಿಸಿ ಸೆಕ್ಷನ್ 354 (B) ಅಡಿ 7 ವರ್ಷ ಸೆರೆವಾಸ, 50,000 ರೂಪಾಯಿ ದಂಡ
ಐಪಿಸಿ ಸೆಕ್ಷನ್ 354 (c) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
ಸೆಕ್ಷನ್ 506 ಅಡಿ 2 ವರ್ಷ ಸೆರೆವಾಸ 10,000 ರೂ. ದಂಡ
ಸೆಕ್ಷನ್ 201 ಅಡಿ 3 ವರ್ಷ ಸೆರೆವಾಸ 25,000 ರೂ. ದಂಡ
ಐಟಿ ಕಾಯ್ದೆ ಸೆ.66(E) ಅಡಿ 3 ವರ್ಷ 25,000 ರೂ. ದಂಡ.
ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭವಾಗಲಿದ್ದು,
ಇದುವರೆಗಿನ ಜೈಲುವಾಸ ಪರಿಗಣನೆ ಆಗುವುದಿಲ್ಲ.
ಏಕೆಂದರೆ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್ ಮೇಲೆ ಪ್ರಜ್ವಲ್ನನ್ನು ವಶಕ್ಕೆ ಪಡೆಯಲಾಗಿತ್ತು.
ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ.
ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ನ್ಯಾಯಾಲಯ, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು. ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಮಾಣಕ್ಕೆ ವಾದ-ಪ್ರತಿವಾದ
ಶಿಕ್ಷೆ ಪ್ರಕಟಣೆಗೂ ಮುನ್ನ ಪ್ರಾಸಿಕ್ಯೂಷನ್ ಪರ ವಕೀಲರಾದ ಬಿಎನ್ ಜಗದೀಶ್, ಎಸ್ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ ಪ್ರಜ್ವಲ್ಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಅದಾದ ನಂತರ ವಾದ ಮಂಡನೆ ಮಾಡಿದ್ದ ಪ್ರಜ್ವಲ್ ಪರ ವಕೀಲೆ ನಳಿನಿ ಮಾಯೇಗೌಡ, ಶಿಕ್ಷೆ ನೀಡುವ ವೇಳೆ ಅಪರಾಧಿಯ ರಾಜಕೀಯ ಭವಿಷ್ಯ, ವಯಸ್ಸು ಇತ್ಯಾದಿಗಳನ್ನೆಲ್ಲ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು.
ನಂತರ ಪ್ರಜ್ವಲ್ ಅಭಿಪ್ರಾಯವನ್ನು ನ್ಯಾಯಾಲಯ ಕೋರಿತ್ತು. ಅದಕ್ಕೆ ಪ್ರತಿಕ್ರಿಯಿಸಿದ್ದ ಪ್ರಜ್ವಲ್, ಸಂಸದನಾಗಿದ್ದಾಗ ಯಾರೂ ಆರೋಪ ಮಾಡಿರಲಿಲ್ಲ. ಆಗ ಏಕೆ ಆರೋಪಿಸಿರಲಿಲ್ಲ? ಚುನಾವಣೆ ಸಮಯದಲ್ಲಿಯೇ ಯಾಕೆ ಹಾಗೆ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದರಲ್ಲದೆ, ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದಿದ್ದರು.
ಪ್ರಜ್ವಲ್ ಮುಂದಿನ ಆಯ್ಕೆ:
ಇದೀಗ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ನನ್ನು ದೋಷಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಹಿನ್ನೆಲೆ ಅವರು ತಮ್ಮ ವಕೀಲರ ಮೂಲಕ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಪ್ರಜ್ವಲ್ ಪರ ಮೂಲಗಳು ತಿಳಿಸಿವೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಶಿಕ್ಷೆಗೆ ತಡೆ ಅಥವಾ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬಹುದು. ಹಾಗೇ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಹೈಕೋರ್ಟ್ ಮೋರೆ ಹೋಗಬಹುದು.
ಅಲ್ಲದೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ತೀರ್ಪು ರದ್ದುಗೊಳಿಸುವಂತೆ ಅರ್ಜಿಸುವ ಅವಕಾಶ ಸಹ ಪ್ರಜ್ವಲ್ ರೇವಣ್ಣ ಮುಂದೆ ಇದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಪರ ವಕೀಲರು ಯಾವ ಹೆಜ್ಜೆ ಇಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಒಂದು ವೇಳೆ ಪ್ರಜ್ವಲ್ ಪರ ವಕೀಲರು ಸಲ್ಲಿಸುವ ಅರ್ಜಿಗೆ ಹೈಕೋರ್ಟ್, ತಡೆ ನೀಡಬಹುದು, ಇಲ್ಲ ಜನಪ್ರತಿನಿಧಿಗಳ ಕೋರ್ಟ್ ನೀಡಿದ ಶಿಕ್ಷೆ ಪ್ರಮಾಣದಲ್ಲಿ ಕೊಂಚ ಕಡಿಮೆ ಮಾಡಬಹುದು. ಒಂದು ವೇಳೆ ಹೈಕೋರ್ಟ್ , ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶವನ್ನು ಎತ್ತಿ ಹಿಡಿದರೆ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಹುದು. ಒಂದು ವೇಳೆ ಸುಪ್ರೀಂಕೋರ್ಟ್ನಲ್ಲೂ ಕೆಳ ನ್ಯಾಯಾಲಯದ ಆದೇಶದ ಎತ್ತಿಹಿಡಿದರೆ ಪ್ರಜ್ವಲ್ ರೇವಣ್ಣಗೆ ಜೈಲು ಶಿಕ್ಷೆ ಖಚಿತ ಎಂದು ಹಿರಿಯ ನ್ಯಾಯವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa