ಬಳ್ಳಾರಿ, 02 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಸಾರಿಗೆ ನೌಕರರ ವೇತನ ಪರಿಷ್ಕರಣೆ, ಹಿಂಬಾಕಿ ಪಾವತಿ ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರ ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಮುಖಂಡರಾದ ಎಚ್. ಆದಿಮೂರ್ತಿ, ಚೆನ್ನಪ್ಪ, ಹನುಮಂತಪ್ಪ, ಬಸವರಾಜ್, ಶಿವಪ್ಪ, ಗಾದಿಲಿಂಗಪ್ಪ, ಶಿವಕುಮಾರ್ ಇನ್ನಿತರರು ಸುದ್ದಿಗಾರಿಗೆ ಈ ಮಾಹಿತಿ ನೀಡಿದ್ದು, ಆಗಸ್ಟ್ 5ರ ಮಂಗಳವಾರ ನಸುಕಿನಿಂದಲೇ ಬಸ್ಗಳ ಸಂಚಾರ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕಾರ ಮತ್ತು ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರು ಹಗಲು ರಾತ್ರಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿಯನ್ನು ಕೇಳಿದರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಹಿಂದೆ ಕರ್ನಾಟಕವನ್ನು ಆಳಿದ್ದ ಸರ್ಕಾರದ ಮೇಲೆ ಬೆರಳಿಟ್ಟು ತೋರಿಸುತ್ತಿದ್ದಾರೆ. ಸರ್ಕಾರ ನಮ್ಮ ಮೇಲೆ ಎಸ್ಮಾ ಜಾರಿಯ
ಬೆದರಿಕೆ ಜೊತೆಯಲ್ಲಿ ಏನೇನೋ, ತಂತ್ರಗಾರಿಕೆಯನ್ನು ನಡೆಸುತ್ತಿದೆ ಎಂದರು.
ಗ್ಯಾರಂಟಿಗಳನ್ನು ನೀಡಿದ್ದೇವೆ ಎನ್ನುವ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ
38 ತಿಂಗಳ ಪರಿಷ್ಕರಣೆ ವೇತನ ಹಿಂಬಾಕಿ 3500 ರೂಪಾಯಿಯನ್ನು ಏತಕ್ಕಾಗಿ ಪಾವತಿಸುತ್ತಿಲ್ಲ? ಕಾರಣ ಆಗಸ್ಟ್ 5ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಒಕ್ಕೂಟ ನಿರ್ಧರಿಸಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್