ಬೆಂಗಳೂರು, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿದ ಪ್ರಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಿರುವುದನ್ನು ಉಲ್ಲೇಖಿಸಿ ಸಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು,
ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ.
ದಯೆಯೇ ಧರ್ಮದ ಮೂಲವಯ್ಯ ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ.
ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ.
ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು.
ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ.
ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa