ಬೆಂಗಳೂರು, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ, ಹಿಂದೂ ಉತ್ಸವಗಳು ಧಾರ್ಮಿಕ ಆಚರಣೆಗಳನ್ನು ಅಪಮಾನಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಗಣೇಶೋತ್ಸವದಲ್ಲಿ ಡಿಜೆ ನಿಷೇಧಿಸುವ ಸರ್ಕಾರ ಸಾಂಸ್ಕೃತಿಕ ಚಟುವಟಿಕೆಗಳನ್ನೂ ಹತ್ತಿಕ್ಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ನಿಗದಿತ ಸಮಯಕ್ಕೆ ಮುನ್ನವೇ ಪರಂಪರೆಯಿಂದ ನಡೆದುಬಂದ ಯಕ್ಷಗಾನ ಪ್ರದರ್ಶನವನ್ನು ನಿಲ್ಲಿಸುವ ಮೂಲಕ ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ಸಂಸ್ಕೃತಿಯ ಮೇಲೆ ದೌರ್ಜನ್ಯ ನಡೆಸಿದೆ. ಮತ್ತೊಂದು ಕಡೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿದ್ದಲ್ಲ ಎಂದು ಉಪಮುಖ್ಯಮಂತ್ರಿಗಳು ಹೇಳುತ್ತಾರೆ, ಅದೇ ಸಾಂಸ್ಕೃತಿಕ ನಗರಿಯ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಉದ್ಯಮಿ ದಂಪತಿಗಳ ರೀಲ್ಸ್ ಮಾಡಲು ಅವಕಾಶ ಮಾಡಿಕೊಟ್ಟು ಸಾಂಸ್ಕೃತಿಕ ನಗರಿಯ ಘನತೆಯನ್ನು ಕುಗ್ಗಿಸುತ್ತಿದೆ. ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ನಾಡಿನ ಸಂಸ್ಕೃತಿಯನ್ನು ಅವಮಾನಿಸುವುದು ಕಾಂಗ್ರೆಸ್ ಸರ್ಕಾರದ ಒಂದು ಭಾಗವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಗಣೇಶೋತ್ಸವದ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚುವರಿ ಅವಧಿಯನ್ನು ವಿಸ್ತರಿಸಬೇಕು ಎಂದು ಕಳೆದ ವಿಧಾನ ಸಭಾ ಅಧಿವೇಶನದಲ್ಲಿಯೇ ಚರ್ಚೆಯಾಗಿ ಸರ್ಕಾರ ಸಮ್ಮತಿಯನ್ನೂ ವ್ಯಕ್ತಪಡಿಸಿದೆ. ಆದಾಗ್ಯೂ ಪೊಲೀಸರು ಗಣೇಶೋತ್ಸವದ ಮೇಲೆ ಕೆಂಗಣ್ಣು ಬೀರುತ್ತಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa