ವಿಜಯಪುರ, 05 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದರೂ ಪದವಿ ಪ್ರವೇಶಾತಿಗೆ ಹಣವಿಲ್ಲದೇ ಪರದಾಡುತ್ತಿದ್ದ ವಿದ್ಯಾರ್ಥಿನಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ರಿಷಬ್ ಪಂತ್ ನೆರವಾಗಿದ್ದಾರೆ.
ತಾಲೂಕಿನ ರಬಕವಿ ಗ್ರಾಮದ ಕು. ಜ್ಯೋತಿ ಕಣಬೂರ ಪಿಯುಸಿಯಲ್ಲಿ ಶೇ. 83 ಅಂಕ ಗಳಿಸಿದ್ದಳು.ಉನ್ನತ ಶಿಕ್ಷಣ ಪಡೆಯಬೇಕು ಎಂದು ಕನಸು ಕಂಡಿದ್ದ ಇವಳಿಗೆ ಬಡತನ ಹಾಗೂ ಆರ್ಥಿಕ ತೊಂದರೆ ಕಾಡ ತೊಡಗಿತ್ತು, ತಂದೆ ತೀರ್ಥಯ್ಯ ಗ್ರಾಮದಲ್ಲಿ ಚಿಕ್ಕದಾದ ಚಹಾದ ಅಂಗಡಿ ನಡೆಸುತ್ತಿದ್ದು, ಮಗಳ ಕಲಿಕೆಗೂ ಪರದಾಡುತ್ತಿದ್ದರು.
ಈ ಸಂದರ್ಭದಲ್ಲಿ ಗ್ರಾಮದವರಾದ ಗುತ್ತಿಗೆದಾರ ಅನಿಲ ಹುಣಶಿಕಟ್ಟಿ ಅವರನ್ನು ಜಮಖಂಡಿ ಬಿಎಲ್ಡಿಇ ಸಂಸ್ಥೆಯ ಕಾಲೇಜಿನಲ್ಲಿ ಬಿಸಿಎಗೆ ಸೀಟ್ ಕೊಡಿಸುವಂತೆ ಕೋರಿಕೊಂಡಿದ್ದರು. ಸೀಟ್ ಕೊಡಿಸುವ ಜತೆಗೆ ಆರ್ಥಿಕ ನೆರವು ಒದಗಿಸುವುದಕ್ಕೂ ಪ್ರಯತ್ನಿಸುವ ಭರವಸೆ ನೀಡಿದ ಅನಿಲ್ ಅವರು ರಿಷಬ್ ಪಂತ್ ಅವರಿಗೆ ಆತ್ಮೀಯರಾಗಿರುವ ಅವರು ರಿಷಬ್ ಅವರ ಗಮನಕ್ಕೆ ತಂದಾಗ ಕೂಡಲೇ ನೆರವಿಗೆ ಬಂದಿರುವ ರಿಷಬ್ ಜು.17ರಂದು ಕಾಲೇಜಿನ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಿದ್ದಾರೆ.
ವಿದ್ಯಾರ್ಥಿನಿ ಜ್ಯೋತಿಯ ಮೊದಲ ಸೆಮಿಸ್ಟರ್ನ 40 ಸಾವಿರ ರೂ.ಗಳ ಶುಲ್ಕವನ್ನು ಪಂತ್ ಭರಣೆ ಮಾಡಿದ್ದಾರೆ.
ಪುಟ್ಟ ಗ್ರಾಮದ ವಿದ್ಯಾರ್ಥಿನಿಗೆ ಯಾವುದೇ ಅಪೇಕ್ಷೆ ಇಲ್ಲದೆ ಪಂತ್ ನೆರವಾಗುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಈ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande