ನವದೆಹಲಿ, 05 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್ʼ ರೈಲು ಸಂಚಾರ ಸೇರಿದಂತೆ ಮೂರು ವಂದೇ ಭಾರತ್ ರೈಲು ಸಂಚಾರಕ್ಕೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆ.10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.
ಈ ಹಿಂದೆ ಸಚಿವ ಪ್ರಲ್ಹಾದ ಜೋಶಿ ಅವರು ಬೆಂಗಳೂರು-ಬೆಳಗಾವಿ ಮಧ್ಯೆ ನೂತನ ಒಂದೇ ಭಾರತ್ ರೈಲು ಸಂಚಾರ ಆರಂಭಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಒತ್ತಾಯಿಸಿದ್ದರು.
ಇದಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ಭಾನುವಾರ ತಾವೇ ಖುದ್ದು ಈ ಹೊಸ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.
ಈ ನೂತನ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 5.20 ನಿಮಿಷಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50 ನಿಮಿಷಕ್ಕೆ ತಲುಪಲಿದೆ. ವಾಪಸ್ ಬೆಂಗಳೂರಿನಿಂದ ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ.
ಈ ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa