ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕುರುಬ ಸಮುದಾಯವನ್ನು ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಲು ಮುಂದಾಗಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಬಳ್ಳಾರಿ ನಗರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನೆಯನ್ನು ನಡೆದು, ಜಿಲ್ಲಾಡಳಿತದ ಮೂಲಕ ಸರ್ಕಾರ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಕಾಗೆ ಪಾರ್ಕ್ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನೆಯ ನೇತೃತ್ವವಹಿಸಿದ್ದ ಅಖಂಡ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಟದ ಅಧ್ಯಕ್ಷ ತಿಮ್ಮಪ್ಪ ಜೋಳದರಾಶಿ ಅವರು, ವಾಲ್ಮೀಕಿ ಗುರುಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದು ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸರ್ಕಾರ ಕುರುಬರನ್ನು ಎಸ್ಟಿ ಮೀಸಲಾತಿ ವ್ಯಾಪ್ತಿಗೆ ಸೇರಿಸಿದಲ್ಲಿ ಉಗ್ರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬರನ್ನು ಎಸ್ಟಿಗೆ ಸೇರ್ಪಡೆ ಮಾಡುವುದನ್ನು ತಕ್ಷಣವೇ ಕೈಬಿಡಬೇಕು. ಅಲ್ಲದೇ, ವಾಲ್ಮೀಕಿ ಸಮುದಾಯವನ್ನು ಶೈಕ್ಷಣಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸರ್ವಾಂಗೀಣ ಅಭಿವೃದ್ಧಿಪಥದತ್ತ ತರಲು ಅಗತ್ಯ ಯೋಜನೆಗಳನ್ನು ರೂಪಿಸಿ, ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ನ್ಯಾಯವಾದಿ ಜಯರಾಂ, ಜನಾರ್ಧನ್ ನಾಯಕ್, ರುದ್ರಪ್ಪ, ರೂಪನಗುಡಿ ಗೋವಿಂದಪ್ಪ, ಪುಷ್ಪಲತಾ, ಸತ್ಯನಾರಾಯಣ ಇತರರಿದ್ದರು. ವಾಲ್ಮೀಕಿ ಮತ್ತು ಎಸ್ಟಿ ಜನಾಂಗದ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್