ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಾತಿ ಸಮೀಕ್ಷೆಯಲ್ಲಿ ಸರ್ಕಾರ ಅನಗತ್ಯವಾದ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ ಸಮೀಕ್ಷೆಯಲ್ಲಿ ತೀರಾ ವೈಯಕ್ತಿಕ ವಿಷಯ ಕೇಳಿದರೆ ಜನರು ಮಾಹಿತಿ ನೀಡದೇ ಇರಬಹುದು. ಇದು ಜನರಿಗೆ ಬಿಟ್ಟ ವಿಚಾರ ಎಂದು ಕೋರ್ಟ್ ಕೂಡ ಹೇಳಿದೆ. ಕೇಂದ್ರ ಸರ್ಕಾರ ಸಂವಿಧಾನದ ಪ್ರಕಾರ ತನ್ನ ಅಧಿಕಾರ ಚಲಾಯಿಸಿ ಜಾತಿ ಗಣತಿ, ಜನ ಗಣತಿ ಮಾಡಲಿದೆ. ರಾಜ್ಯ ಸರ್ಕಾರಕ್ಕೆ ಸಮೀಕ್ಷೆಯ ಅಧಿಕಾರವೇ ಇಲ್ಲ ಎಂದರು.
ಸಮೀಕ್ಷೆ ಮಾಡುವವರಿಗೆ ತರಬೇತಿ ನೀಡಿಲ್ಲ. ಸಮೀಕ್ಷೆ ಮಾಡದ ಸಿಬ್ಬಂದಿಯನ್ನು ಅಮಾನತು ಮಾಡುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ. ರಾಜ್ಯ ಸರ್ಕಾರದಿಂದ ಸಮೀಕ್ಷೆ ಅಗತ್ಯವೇ ಇರಲಿಲ್ಲ. ಎರಡು ಕೋಟಿ ಮನೆಗಳ ಹಣೆಬರಹವನ್ನು ಎರಡೇ ದಿನಗಳಲ್ಲಿ ಬರೆಯಲು ಮುಂದಾಗಿದ್ದಾರೆ. ಜಾತಿ ಸಮೀಕ್ಷೆಯ ಕಾಲಂಗಳಲ್ಲಿ ಕೇವಲ ಜಾತಿ/ಧರ್ಮಕ್ಕೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಸಾಮಾಜಿಕ-ಶೈಕ್ಷಣಿಕದ ಅಂಶಗಳಿಲ್ಲ. ಸಮೀಕ್ಷೆ ಮುಗಿದ ನಂತರ ವರದಿಯನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಜಾತಿ ಸಮೀಕ್ಷೆಗೆ ನಮ್ಮ ವಿರೋಧವಿಲ್ಲ. ಆದರೆ ಜಾತಿ/ಧರ್ಮ ಒಡೆಯುವ ಅಜೆಂಡಾಗೆ ನಮ್ಮ ವಿರೋಧವಿದೆ. ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿದ್ದು, ಆ ನಡೆಯನ್ನೇ ಇಲ್ಲಿ ತೋರಿದ್ದಾರೆ. ಸಂವಿಧಾನದ ಅಡಿಯಲ್ಲಿ ಯಾವುದೇ ಜಾತಿಗೆ ಪರಿಶಿಷ್ಟ ಪಂಗಡದ ಸ್ಥಾನ ನೀಡಲು ನಮ್ಮ ಅಭ್ಯಂತರವಿಲ್ಲ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa