ವಿಜಯಪುರ, 06 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಒಳಮೀಸಲಾತಿ ಹೆಸರಿನಲ್ಲಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳ ಜೊತೆಗೆ ಇನ್ನೂ 63 ಜಾತಿಗಳನ್ನು ಸೇರಿಸಿ, ಶೇ.5 ಮೀಸಲಾತಿ ನೀಡಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ವಿಜಯಪುರ ನಗರದಲ್ಲಿ ಲಂಬಾಣಿ, ಬೋವಿ, ಕೊರಚ, ಕೊರಮ, ಸಮುದಾಯಗಳು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ ನೂರಾರು ಪ್ರತಿಭಟನಾಕಾರರು ಭಾಗವಹಿಸಿದ್ದರು.
ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರ ಭಾವಚಿತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಹಂದಿಗಳನ್ನು ಹಿಡಿಯುವ ಬಲೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಭಾವಚಿತ್ರಗಳನ್ನು ಹಾಕಿ ಪ್ರತಿಭಟಿಸಿದರು.
ಪ್ರತಿಭಟನೆಯಲ್ಲಿ ಹಂದಿಮರಿಗಳನ್ನು ಹಾಗೂ ತಲೆಯ ಮೇಲೆ ಚಪ್ಪಲಿಗಳನ್ನು ಹೊತ್ತು ಕಿಡಿಕಾರಿದರು.
ಅಲ್ಲದೇ ಡಾ. ನಾಗಮೋಹನ್ ದಾಸ್ ವರದಿಯನ್ನು ಮರುಪರಿಶೀಲಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮುಖಂಡರು ಮಾತನಾಡಿ, ''ರಾಜ್ಯ ಸರಕಾರ ಮೀಸಲಾತಿ ಹಂಚಿಕೆಯಲ್ಲಿ ನಮಗೆ ಅನ್ಯಾಯ ಮಾಡಿದೆ. ಲಂಬಾಣಿ, ಕೊರಮ, ಕೊರಚ ಹಾಗೂ ಭೋವಿ ಸಮುದಾಯಗಳ ಜನಸಂಖ್ಯೆ ಇತರೆ ಸಮುದಾಯಗಳ ಜನಸಂಖ್ಯೆಗಿಂತ ಹೆಚ್ಚಾಗಿದೆ. ಅಲ್ಲದೆ, ಡಾ. ನಾಗಮೋಹನ್ ದಾಸ್ ವರದಿ ದೋಷಪೂರಿತ ದತ್ತಾಂಶಗಳಿಂದ ಕೂಡಿದೆ. ಹೀಗಾಗಿ ನಾವು ಈ ಮೀಸಲಾತಿ ಹಂಚಿಕೆ ಒಪ್ಪುವುದಿಲ್ಲ. ಕಾರಣ ಸರಕಾರ ವರದಿಯನ್ನು ಮರುಪರಿಶೀಲಿಸಬೇಕು'', ಎಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande