
ಬೆಂಗಳೂರು, 11 ಜನವರಿ (ಹಿ.ಸ.) :
ಆ್ಯಂಕರ್ : ಎಐಸಿಸಿ ನಿರ್ದೇಶನದಂತೆ ‘ಮನರೇಗಾ ಬಚಾವ್ ಸಂಗ್ರಾಮ’ ಕಾರ್ಯಕ್ರಮದ ಆಯೋಜನೆ, ಬಿ.ಎಲ್.ಎ ಪಟ್ಟಿ ಪರಿಶೀಲನೆ, ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಚುನಾವಣೆಗಳ ಸಿದ್ಧತೆ ಕುರಿತು ಚರ್ಚೆ ನಡೆಸಲು ಮತ್ತು ವೋಟ್ ಚೋರಿ ವಿರುದ್ಧ ನಡೆಸಿದ ಸಹಿ ಸಂಗ್ರಹ ಅಭಿಯಾನದ ಯಶಸ್ಸಿನ ಬಗ್ಗೆ ಅವಲೋಕನ ಮಾಡಲು ಕೆಪಿಸಿಸಿ ಅಧ್ಯಕ್ಷರೂ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನವರಿ 13, 2026 ರಂದು ಅರಮನೆ ಮೈದಾನದಲ್ಲಿ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, 2024ರ ಲೋಕ ಸಭೆ ಚುನಾವಣೆ ಅಭ್ಯರ್ಥಿಗಳು, 2023ರ ವಿಧಾನ ಸಭೆ ಚುನಾವಣೆ ಅಭ್ಯರ್ಥಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಮಟ್ಟದ ನಿಗಮ–ಮಂಡಳಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಗ್ಯಾರಂಟಿ ಸಮಿತಿ ಜಿಲ್ಲಾ ಅಧ್ಯಕ್ಷರು, ಮಾಜಿ ಸಂಸದರು, ಮಾಜಿ ಶಾಸಕರು, ಕೆಪಿಸಿಸಿ ಮುಂಚೂಣಿ ಘಟಕಗಳು, ಸೆಲ್ಗಳು ಹಾಗೂ ವಿಭಾಗಗಳ ರಾಜ್ಯಾಧ್ಯಕ್ಷರುಗಳು ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ, ಎಐಸಿಸಿ ಉಸ್ತುವಾರಿ ಕಾರ್ಯದರ್ಶಿಗಳು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ. ಮುಂದಿನ ರಾಜಕೀಯ ಹೋರಾಟಗಳು ಹಾಗೂ ಸಂಘಟನಾ ಬಲವರ್ಧನೆ ಕುರಿತು ಮಹತ್ವದ ನಿರ್ಣಯಗಳ ನಿರೀಕ್ಷೆಯಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa