
ಮೈಸೂರು, 12 ಜನವರಿ (ಹಿ.ಸ.) :
ಆ್ಯಂಕರ್ : ಮೈಸೂರು ಜಿಲ್ಲಾ ಪಂಚಾಯತ್ ಕಚೇರಿಯ ಡಿ.ದೇವರಾಜ್ ಅರಸು ಸಭಾಂಗಣದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚೆ ನಡೆಸಿದರು.
ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಅವಶ್ಯಕವಿರುವ ಹೊಸ ಹಾಸ್ಟಲ್ಗಳು ಹಾಗೂ ಹಾಸ್ಟೆಲ್ಗಳಿಗೆ ಸ್ವಂತ ಕಟ್ಟಡಗಳ ವಿವರವನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಶ್ರಮ ಶಾಲೆಗಳಲ್ಲಿ ಬಹುತೇಕ ಹೊರಗುತ್ತಿಗೆ ನೌಕರರು ಕೆಲಸ ನಿರ್ವಹಿಸುತ್ತಿದ್ದು, ನೇಮಕಾತಿ ಪ್ರಕ್ರಿಯೆ ಬಗ್ಗೆ ಹಾಗೂ ಹಾಡಿ ಜನರಿಗೆ ಹೆಚ್.ಡಿ.ಕೋಟೆ, ಪಿರಿಯಾಪಟ್ಟಣ ಹಾಗೂ ಹುಣಸೂರು ತಾಲ್ಲೂಕಿನಲ್ಲಿ ಕೌಶಲ್ಯಾಧಾರಿತ ತರಬೇತಿ ಕೇಂದ್ರಗಳನ್ನು ತೆರೆಯಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಮೈಸೂರು ನಗರದಲ್ಲಿ 390 ಕೆ.ಎಸ್.ಆರ್.ಟಿಸಿ ಬಸ್ ಗಳು ಮಾತ್ರ ಕಳೆದ 15 ವರ್ಷದಿಂದ ಸಂಚಾರಕ್ಕೆ ಲಭ್ಯವಿದೆ. ಜನಸಂಖ್ಯೆ ಹೆಚ್ಚಳವಾಗಿದ್ದು, ಹೆಚ್ಚಿನ ಬಸ್ ಹಾಗೂ ಡಿಪೋನ ಅವಶ್ಯಕತೆ ಇರುತ್ತದೆ. ಈ ಬಗ್ಗೆ ಮಾಹಿತಿ ಸಲ್ಲಿಸುವಂತೆ ತಿಳಿಸಲಾಯಿತು
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು. ಅವರಿಗೆ ಬೇಕಿರುವ ವಸತಿ ಶಾಲೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಇನ್ನಿತರೆ ಯೋಜನೆಗಳ ಬಗ್ಗೆ ವರದಿ ಸಿದ್ಧಪಡಿಸುವಂತೆ ಹೇಳಿದರು.
ಅಧಿಕಾರಿಗಳು ಸಭೆಯಲ್ಲಿ ಚರ್ಚಿಸುವ ಕೆಲವು ವಿಷಯಗಳನ್ನು ಇಲಾಖಾ ಮಂತ್ರಿಗಳ ವ್ಯಾಪ್ತಿಯಲ್ಲಿ ಚರ್ಚಿಸಿ ಸರಿಪಡಿಸಬಹುದು. ಅಂತಹ ವಿಷಯಗಳನ್ನು ಅವರ ಗಮನಕ್ಕೆ ಆಯವ್ಯಯದಲ್ಲಿ ಸೇರಿಸಬೇಕಿರುವ ವಿಷಯಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa