
ಬಳ್ಳಾರಿ,(ತೋರಣಗಲ್ಲು), 19 ಜನವರಿ (ಹಿ.ಸ.) :
ಆ್ಯಂಕರ್ : ವಿದ್ಯಾರ್ಥಿ ಜೀವನದಲ್ಲಿ ಸೋಲು ಗೆಲುವು ಎರಡನ್ನೂ ಮೆಟ್ಟಿನಿಂತು ಜೀವನದ ಗುರಿಯನ್ನು ಸಾಧಿಸಿಕೊಳ್ಳಬೇಕು ಎಂದು ಸಂಸದ ಈ. ತುಕಾರಾಂ ಅವರು ತಿಳಿಸಿದ್ದಾರೆ.
ತೋರಣಗಲ್ಲು ಜಿಂದಾಲ್ನ ಆದರ್ಶ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಮತ್ತು ಜಿಂದಾಲ್ ಆದರ್ಶ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ನಡೆದ ಕಬ್ಸ್, ಬುಲ್ ಬುಲ್ಸ್, ಸ್ಕೌಟ್ ಗೈಡ್ಸ್ ಮತ್ತು ರೋವರ್ಸ್ ಅಂಡ್ ರೇಂಜರ್ಸ್ ಹಾಗೂ ದಳ ನಾಯಕರುಗಳ ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಿಸ್ತು ಮತ್ತು ಸಂಯಮವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನವನ್ನು ಶಿಸ್ತುಬದ್ಧವಾಗಿ ರೂಪಿಸುವಲ್ಲಿ ಭಾರತ್ ಸ್ಕೌಟ್ ಅಂಡ್ ಗೈಡ್ ಸಂಸ್ಥೆ ತನ್ನದೇ ಆದ ಕೊಡುಗೆಯನ್ನು ನೀಡುತ್ತದೆ ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಕರ್ನಾಟಕದಲ್ಲಿ ಪ್ರಸ್ತುತ 7.84 ಲಕ್ಷ ಬನ್ನೀಸ್, ಕಬ್ಸ್, ಬುಲ್ ಬುಲ್, ಸ್ಕೌಟ್, ಗೈಡ್, ರೋವರ್, ರೇಂಜರ್ ವಿದ್ಯಾರ್ಥಿಗಳಿದ್ದಾರೆ ಎಂದರು.
ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಮುಖ್ಯ ಅತಿಥಿಗಳಾಗಿ, ಮಕ್ಕಳನ್ನು ಶಿಕ್ಷಣದಿಂದ ವಂಚಿಸಬೇಡಿ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಕಲ್ಯಾಣ ಕರ್ನಾಟಕ ಉಸ್ತುವಾರಿಗಳಾದ ಮಲ್ಲೇಶ್ವರಿ ಜುಜಾರೆ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯು ಸುಮಾರು 75 ವರ್ಷದ ಹಿಂದೆ ವೆಂಕಣ್ಣ ಮತ್ತು ಗುರುರಾಜರಾವ್, ಮಲ್ಲಿಕಾರ್ಜುನಯ್ಯ ನೇತೃತ್ವ ವಹಿಸಿದ್ದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಉಮಾದೇವಿ, ಹಂಪೆ ಕನ್ನಡ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ವಿರೂಪಾಕ್ಷಿ ಪೂಜಾರಹಳ್ಳಿ, ಆದರ್ಶ ವಿದ್ಯಾಲಯದ ಕುಮಾರಸ್ವಾಮಿ ಬಳಿಗಾರ, ತೋರಣಗಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅರಳಾಪುರ ವೀರೇಶಪ್ಪ, ಭಾರತ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ಉಪಾಧ್ಯಕ್ಷ ಮಲ್ಲೇಶಪ್ಪ, ಜಿಲ್ಲಾ ಕಾರ್ಯದರ್ಶಿ ವಿಜಯ ಸಿಂಹ ಸಂಡೂರು ತಾಲೂಕಿನ ಕಾರ್ಯದರ್ಶಿ ಸೋಮಪ್ಪ ಸೇರಿ ಅನೇಕರು ಈ ಸಂದರ್ಭದಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್