
ಹುಬ್ಬಳ್ಳಿ, 04 ಜನವರಿ (ಹಿ.ಸ.) :
ಆ್ಯಂಕರ್ : ಸ್ವಚ್ಛತೆಯೊಂದಿಗೆ ಸಮೃದ್ಧ ಹುಬ್ಬಳ್ಳಿ ಎಂಬ ಧ್ಯೇಯವಾಕ್ಯದೊಂದಿಗೆ, ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಯುವ ಮೋರ್ಚಾ ಘಟಕದ ವತಿಯಿಂದ ವಾರ್ಡ್ ನಂ. 55ರ ವ್ಯಾಪ್ತಿಯ ಪುರಾತನ ಶ್ರೀ ಭವಾನಿ ಶಂಕರ ಮಠದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಅವರು ಭಾಗವಹಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ ಅವರು, ಸ್ವಚ್ಛತೆ ಸಮಾಜದ ಆರೋಗ್ಯ ಮತ್ತು ಅಭಿವೃದ್ಧಿಗೆ ಮೂಲಭೂತ ಅಂಶವಾಗಿದ್ದು, ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಅಗತ್ಯವೆಂದು ಹೇಳಿದರು.
ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ತಂಡವು ಪ್ರತಿ ತಿಂಗಳು ಎರಡು ಭಾನುವಾರಗಳು ನಿರಂತರವಾಗಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಸಂಕಲ್ಪ ಮಾಡಿದ್ದು, ಇಂದಿನಿಂದ ಈ ಮಹತ್ವದ ಜನಸ್ಪರ್ಶಿ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಸ್ವಚ್ಛ ಮತ್ತು ಸುಂದರ ಹುಬ್ಬಳ್ಳಿಯನ್ನು ನಿರ್ಮಿಸುವ ಗುರಿಯೊಂದಿಗೆ ನಡೆಯುತ್ತಿರುವ ಈ ಅಭಿಯಾನದಲ್ಲಿ ಯುವ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa