

ರಾಯಚೂರು, 04 ಜನವರಿ (ಹಿ.ಸ.) :
ಆ್ಯಂಕರ್ : ವೈಯಕ್ತಿತ ಮಾಹಿತಿ ಹೊರತುಪಡಿಸಿ, ಸರ್ಕಾರದ ಯೋಜನೆಗಳು, ಸೌಲಭ್ಯಗಳ ಹಿತಾಸಕ್ತಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯುವುದು ಸಾರ್ವಜನಿಕರ ಮೂಲಭೂತ ಹಕ್ಕಾಗಿದ್ದು, ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಮಾಹಿತಿ ನೀಡುವ ಮೂಲಕ ದಂಡದಿಂದ ಮುಕ್ತರಾಗಬೇಕು ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಬಿ.ವೆಂಕಟ್ ಸಿಂಗ್, ರುದ್ರಣ್ಣ ಹರತಿ ಕೋಟಿ, ಎಸ್. ರಾಜಶೇಖರ್ಅವರು ಹೇಳಿದ್ದಾರೆ.
ಕರ್ನಾಟಕ ಮಾಹಿತಿ ಆಯೋಗದ ನಿರ್ದೇಶನದಂತೆ ಬಳ್ಳಾರಿ ಜಿಲ್ಲಾಡಳಿತ ವತಿಯಿಂದ ಬಳ್ಳಾರಿಯ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿಗೆ ಏರ್ಪಡಿಸಿದ್ದ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
2005ರಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಬಾರಿಗೆ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿ, ಕರ್ನಾಟಕ ಮಾಹಿತಿ ಹಕ್ಕು ಆಯೋಗ ರಚಿಸಲಾಯಿತು ಎಂದು ತಿಳಿಸಿದರು.
ಕಳೆದ ಸಾಲಿನ ಫೆಬ್ರವರಿ ಮಾಹೆಯಲ್ಲಿ 6 ಜನರನ್ನು ರಾಜ್ಯದ ವಿವಿಧ ಪೀಠಗಳಿಗೆ ಮಾಹಿತಿ ಆಯೋಗದ ಆಯುಕ್ತರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತು. ರಾಜ್ಯದಲ್ಲಿ ಬಾಕಿ ಇದ್ದ 55 ಸಾವಿರ ಪ್ರಕರಣಗಳಲ್ಲಿ 20 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿ, ಪ್ರಸ್ತುತ 35 ಸಾವಿರ ಪ್ರಕರಣಗಳು ಬಾಕಿ ಇವೆ ಎಂದು ಆಯುಕ್ತ ಬಿ.ವೆಂಕಟ ಸಿಂಗ್ ಅವರು ವಿವರಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿಗೆ ಕಲಬುರಗಿ ಪೀಠವು ಕಾರ್ಯನಿರ್ವಹಿಸುತ್ತಿದೆ. ಈ ಭಾಗದಲ್ಲಿ ಮಾಹಿತಿ ಕೋರಿ ಸಲ್ಲಿಕೆಯಾದ ಅರ್ಜಿಗಳನ್ನು ಇಲ್ಲಿ ವಿಚಾರಣೆ ನಡೆಸಲಾಗುತ್ತದೆ. ಕಕ ಭಾಗದ ಕಲಬುರಗಿ ಪೀಠದಲ್ಲಿ 2010 ರಿಂದ 2022 ರವರೆಗೆ ಬಾಕಿ ಇದ್ದ 6,600 ಪ್ರಕರಣಗಳನ್ನೂ 2025 ರ ಡಿ.31 ಕ್ಕೆ ಇತ್ಯರ್ಥಗೊಳಿಸಲಾಗಿದೆ. ಇದೇ ಜ.05 ರಿಂದ 2023 ರಿಂದ ಬಾಕಿ ಇರುವ ಪ್ರಕರಣಗಳನ್ನು ಅಂತ್ಯ ಹಾಡಲು ಉದ್ದೇಶಿಸಲಾಗಿದೆ ಎಂದರು.
ಮಾಹಿತಿ ನೀಡಲು ನಿರ್ಲಕ್ಷೆ ತೋರುವ ಅಧಿಕಾರಗಳ ಮೇಲೆ ದಂಡ ಮತ್ತು ಶಿಸ್ತು ಕ್ರಮ ಜರುಗಿಸುವ ಅಧಿಕಾರಿ ಅಯೋಗ ಹೊಂದಿರುತ್ತದೆ. ಹಾಗಾಗಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ನಿಗದಿತ ಕಾಲಾವಧಿಯೊಳಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಮಾಹಿತಿ ಹೊಂದಬೇಕು ಎಂದರು.
ಜಿಲ್ಲಾ ಮತ್ತು ತಾಲ್ಲೂಕು ಕೆಡಿಪಿ (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ) ಸಭೆಗಳಲ್ಲಿಯೂ ಸಹ ಮಾಹಿತಿ ಹಕ್ಕು ಕಾಯ್ದೆ ಕುರಿತು ವಿಷಯ ಅಳವಡಿಸುವುದರ ಮೂಲಕ ಪ್ರಕರಣಗಳ ಅಂಕಿ-ಅಂಶ, ಬಾಕಿ, ಇತ್ಯರ್ಥ ಕುರಿತು ಚರ್ಚಿಸಲು ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಮಾಹಿತಿ ಆಯೋಗದ ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅವರು ಮಾತನಾಡಿ, ನಾಗರಿಕರನ್ನು ಸಬಲೀಕರಣಗೊಳಿಸುವ ಉದ್ದೇಶಕ್ಕಾಗಿಯೇ ಮಾಹಿತಿ ಹಕ್ಕನ್ನು ಜಾರಿಗೊಳಿಸಲಾಗಿದೆ. ಭಾರತದ ಸಂವಿಧಾನದ 19(1)(ಎ) ವಿಧಿಯಡಿ ಇದು ಕೂಡ ಮೂಲಭೂತ ಹಕ್ಕಾಗಿದೆ ಎಂದು ತಿಳಿಸಿದರು.
ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರμÁ್ಟಚಾರ ನಿವಾರಣೆಗಾಗಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿಯ ಕರ್ತವ್ಯವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಮಾಹಿತಿ ಪ್ರಾಧಿಕಾರಗಳಿವೆ. ಆಯೋಗ ರಚನೆಯಾದಾಗಿನಿಂದ ರಾಜ್ಯದ ವಿವಿಧ ಇಲಾಖೆಗಳಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಇಲಾಖೆ-11,444, ಕಂದಾಯ-5963, ನಗರಾಭಿವೃದ್ಧಿ ಇಲಾಖೆ-4620, ಶಿಕ್ಷಣ ಇಲಾಖೆ-1599, ಲೋಕೋಪಯೋಗಿ ಇಲಾಖೆ-1365 ಸೇರಿದಂತೆ 34,684 ಪ್ರಕರಣಗಳು ಬಾಕಿ ಇವೆ. ರಾಜ್ಯದಲ್ಲಿ 10,757 ಅಧಿಕಾರಿಗಳಿಗೆ 10.20 ಕೋಟಿ ರೂ. ದಂಡ ವಿಧಿಸಲಾಗಿದೆ. ಅದರಲ್ಲಿ 3084 ಅಧಿಕಾರಿಗಳು 2.70 ಕೋಟಿ ರೂ. ದಂಡ ಪಾವತಿಸಿದ್ದಾರೆ.
ಅದೇರೀತಿಯಾಗಿ ಬಳ್ಳಾರಿ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-372, ಕಂದಾಯ-144, ನಗರಾಭಿವೃದ್ಧಿ ಇಲಾಖೆ-42, ಶಿಕ್ಷಣ ಇಲಾಖೆ-38 ಸೇರಿದಂತೆ ಬಳ್ಳಾರಿ ಜಿಲ್ಲೆಯಲ್ಲಿ 769 ಪ್ರಕರಣಗಳು ಬಾಕಿ ಉಳಿದಿವೆ. ಅರದಲ್ಲಿ 163 ಅಧಿಕಾರಿಗಳಿಗೆ 15.45 ಲಕ್ಷ ರೂ. ದಂಡ ವಿಧಿಸಲಾಗಿದ್ದು, 28 ಅಧಿಕಾರಿಗಳು 3.58 ಲಕ್ಷ ರೂ. ಪಾವತಿಸಿದ್ದಾರೆ. ವಸೂಲಿ ಮಾಡಲು ಕಾರ್ಯದರ್ಶಿಯವರ ಮೂಲಕ ಈಗಾಗಲೇ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದರು.
ಮಾಹಿತಿ ಅಧಿಕಾರಿಯು ಯಾವುದೇ ಸಮಂಜಸ ಕಾರಣವಿಲ್ಲದೇ ಮಾಹಿತಿಯನ್ನು ನೀಡದಿದ್ದಲ್ಲಿ ಅಥವಾ ದುರುದ್ಧೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ, ಜೊತೆಗೆ ಶಿಸ್ತುಕ್ರಮವನ್ನು ಜರುಗಿಸಬಹುದಾಗಿದೆ ಎಂದರು.
ಇನ್ನೋರ್ವ ಕರ್ನಾಟಕ ಮಾಹಿತಿ ಆಯೋಗದ ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರಾಜಶೇಖರ್.ಎಸ್ ಅವರು ಮಾತನಾಡಿ, ಎಲ್ಲ ಅಧಿಕಾರಿ ಸಿಬ್ಬಂದಿಗಳು ಮಾಹಿತಿ ಹಕ್ಕು ಕಾಯ್ದೆ ಕುರಿತು ಸಂಪೂರ್ಣ ಅರಿವು ಹೊಂದಿದ್ದಲ್ಲಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಸಮರ್ಪಕ ಮಾಹಿತಿ ಒದಗಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಯಾವುದೇ ಅಧಿಕಾರಿ ಸಿಬ್ಬಂದಿಗಳ ವೈಯಕ್ತಿಕ ಮಾಹಿತಿ ನೀಡಲು ಬರುವುದಿಲ್ಲ. ಮಾಹಿತಿ ಕೋರಿ ಬಂದಂತಹ ಅರ್ಜಿಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಇದ್ದಲ್ಲಿ ಅಂತಹ ಅರ್ಜಿಗಳಿಗೆ ಮಾಹಿತಿ ನೀಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯಡಿ ಅಧಿಕಾರಿಗಳು ಎದುರಿಸುತ್ತಿರುವ ತೊಂದರೆಗಳನ್ನು ಪರಿಹರಿಸಿಕೊಳ್ಳಲು ಈ ಕಾರ್ಯಾಗಾರವು ತುಂಬಾ ಅನುಕೂಲವಾಗಿದ್ದು, ಇಂತಹ ಕಾರ್ಯಾಗಾರದಲ್ಲಿ ಅಧಿಕಾರಿಗಳು ಭಾಗವಹಿಸಿ ತಮಗಿರುವ ಗೊಂದಲಗಳಿಗೆ ಮಾಹಿತಿ ಪಡೆದುಕೊಳ್ಳುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್