
ಬೆಂಗಳೂರು, 04 ಜನವರಿ (ಹಿ.ಸ.) :
ಆ್ಯಂಕರ್ : ಬಳ್ಳಾರಿಯಲ್ಲಿ ನಡೆದ ರಾಜಕೀಯ ಗಲಾಟೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯ ಬ್ಯಾನರ್ ಗಲಾಟೆ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿ ಖಾಸಗಿ ಪಿಸ್ತೂಲ್ ನಿಂದ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದರು.
ಖಾಸಗಿ ಗನ್ಮ್ಯಾನ್ಗಳ ಬಳಿಯಿದ್ದ ಗನ್ ಹಾಗೂ ರಿವಾಲ್ವರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಯಾವ ಗನ್ನಿಂದ ಗುಂಡು ಹಾರಿಸಲಾಗಿದೆ ಎಂಬುದನ್ನು ಪತ್ತೆಹಚ್ಚಲು ಅವುಗಳನ್ನು ತಜ್ಞರಿಗೆ ನೀಡಲಾಗಿದೆ ಎಂದು ಹೇಳಿದರು.
ಫೈಯರಿಂಗ್ಗೆ ಬಳಸಲಾದ ಬುಲೆಟ್ಗಳನ್ನು ಎಫ್ಎಸ್ಎಲ್ಗೆ ಕಳುಹಿಸಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿದಿದೆ. ಪೊಲೀಸ್ ಗನ್ನಿಂದ ಫೈಯರ್ ಆಗಿಲ್ಲ ಎಂಬ ಮಾಹಿತಿ ಎಡಿಜಿಪಿಯಿಂದ ಲಭ್ಯವಾಗಿದೆ. ಆ ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.
ಪ್ರಕರಣವನ್ನು ಸಿಐಡಿಗೆ ಒಪ್ಪಿಸುವ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಅಗತ್ಯವಿದ್ದರೆ ಸಿಐಡಿ ತನಿಖೆಗೆ ಒಪ್ಪಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.
ಆರೋಪಿಗಳನ್ನು ಬಂಧಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ ನಡೆಸುವುದಾಗಿ ಮಾಜಿ ಸಚಿವ ಶ್ರೀರಾಮುಲು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಬಂಧನ ಮಾಡುವುದು ದೊಡ್ಡ ವಿಚಾರವಲ್ಲ. ಕಾನೂನು ಚೌಕಟ್ಟಿನೊಳಗೆ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ತನಿಖೆ ಪೂರ್ಣಗೊಂಡ ಬಳಿಕ ಯಾರ ಗನ್ನಿಂದ ಫೈಯರ್ ಆಗಿದೆ ಎಂಬುದು ದೃಢಪಟ್ಟರೆ, ಸಂಬಂಧಪಟ್ಟವರನ್ನು ಕಾನೂನು ಪ್ರಕ್ರಿಯೆ ಅನುಸಾರ ಬಂಧಿಸಲಾಗುವುದು ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa