
ರಾಯಚೂರು, 04 ಜನವರಿ (ಹಿ.ಸ.) :
ಆ್ಯಂಕರ್ : ಸದಾಕಾಲಕ್ಕೂ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯವರು ಕೊಡುಗೆ ಅಪಾರವಾಗಿದೆಂದು ಎಂದು ರಾಯಚೂರು ತಹಶಿಲ್ದಾರ್ ಸುರೇಶ್ ವರ್ಮಾ ಅವರು ಹೇಳಿದ್ದಾರೆ.
ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ರಾಯಚೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ಸೇರಿದಂತೆ ವಿಶ್ವದ ವಿವಿಧ ಕಡೆ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿದೆ. ಶಿಲ್ಪಕಲೆಗೆ ಅವರು ನೀಡಿರುವ ಕೊಡುಗೆಗೆ ಇವುಗಳೇ ಸಾಕ್ಷಿ. ಬೇಲೂರು, ಹಳೇಬೀಡು, ಸೋಮನಾಥಪುರ ದೇವಾಲಯಗಳಲ್ಲಿನ ಶಿಲ್ಪಕಲೆ ವಿಶ್ವಕರ್ಮರ ಪ್ರಸ್ತುತತೆಯನ್ನು ಬಿಂಬಿಸುತ್ತಿದೆ. ನಶಿಸಿಹೋಗುತ್ತಿರುವ ವಿಶ್ವಕರ್ಮರ ಕುಲಕಸುಬುಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಿ, ಮುಂದುವರಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದರು.
ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಆಚಾರ ವಿಚಾರಗಳನ್ನು ಸಮಾಜದ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು. ಇಂದಿನ ಮಕ್ಕಳಿಗೆ ಅವರ ಆಚಾರ, ವಿಚಾರಗಳ ಮಾಹಿತಿಯನ್ನು ಒದಗಿಸುವ ಕೆಲಸವನ್ನು ಪೆÇೀಷಕರು ಮಾಡಬೇಕೆಂದರು.
ಈ ವೇಳೆ ಉಪನ್ಯಾಸಕರಾಗಿ ಎಸ್.ಆರ್.ಕೆ. ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಪಕರಾದ ಡಾ.ಸವಿತಾ ಪಂಪಾಪತಿ ಬಡಿಗೇರ್ ಅವರು ಮಾತನಾಡಿ, ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ. ಆ ನಿಟ್ಟಿನಲ್ಲಿ ಸಮಾಜಕ್ಕೆ ಒಳ್ಳೆಯ ಶಿಲ್ಪಕಲೆಗಳನ್ನು ನೀಡಿದ್ದು, ಇವರ ಏಕಾಗ್ರತೆ, ಸಾಧನೆ ಸದಾ ಸ್ಮರಣೀಯ ಎಂದರು.
ಇಂದು ವಿಶ್ವವಿಖ್ಯಾತ ಶಿಲ್ಪಿಯ ಸಂಸ್ಮರಣೆ ಎಲ್ಲೆಡೆ ನಡೆಯುತ್ತಿದೆ. ಸೃಷ್ಟಿಯ ಮೂಲಕರ್ತೃವಾಗಿರುವ ಜಕಣಾಚಾರಿಯವರ ಶಿಲ್ಪಕಲಾ ಕುಶಲತೆ ಇಂದು ಜಗತ್ತಿನ ಎಲ್ಲೆಡೆ ಪಸರಿಸಿದೆ. ಪ್ರಪಂಚದ ಎಲ್ಲ ವಿದ್ಯೆಗಳ ಮೂಲವಾಗಿರುವ ಜಕಣಾಚಾರಿ ಅವರನ್ನು ಜಗತ್ತಿನ ಮೊದಲ ಮುಖ್ಯ ಎಂಜಿನಿಯರ್ ಎನ್ನಬಹುದು. ಜಕಣಾಚಾರಿಯವರು ಸಾಮಾನ್ಯ ಜನರಿಗೆ ದೇವರ ಪರಿಕಲ್ಪನೆ ನೀಡುವ ಮಧ್ಯಸ್ಥಿಕೆದಾರರಾಗಿದ್ದರು. ವಿಶ್ವಕರ್ಮರ ಶಿಲ್ಪಕಲೆ ಅಮರವಾಗಿದೆ ಎಂದರು.
ಶಿಲ್ಪಕಲೆಯಲ್ಲಿ ಶ್ರೀಮಂತ ಪರಂಪರೆ ಹೊಂದಿರುವ ವಿಶ್ವಕರ್ಮ ಸಮುದಾಯ ತಮ್ಮ ಕುಲಕಸುಬುಗಳ ಜೊತೆಗೆ ಶಿಕ್ಷಣ ಪಡೆದು ಸಂಘಟಿತರಾಗಬೇಕು. ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಇತರರಲ್ಲೂ ಜಾಗೃತಿ ಮೂಡಿಸಬೇಕು. ಜೀವನ ಸಾರ್ಥಕ ಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮುದಾಯ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.
ಶಾಸಕರಿಂದ ಮಾಲಾರ್ಪಣೆ: ಇದಕ್ಕೂ ಮುಂಚೆ ನಗರದ ಕಾಳಿದೇವಿ ಆವರಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಅದ್ದೂರಿ ಭಾವಚಿತ್ರ ಮೆರವಣಿಗೆಗೆ ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ.ವಸಂತ ಕುಮಾರ್ ಅವರು ಚಾಲನೆ ನೀಡಿ, ಮಾಲಾರ್ಪಣೆ ಸಲ್ಲಿಸಿ ಗೌರವ ಅರ್ಪಿಸಿದರು. ಈ ವೇಳೆ ವಿವಿಧ ಗಣ್ಯರು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಸಾಥ್ ನೀಡಿದರು.
ಇದೇ ಸಂದರ್ಭದಲ್ಲಿ ದೇವದುರ್ಗದ ಮೂಲ ಪೀಠದ ವಿಶ್ವಕರ್ಮ ಶ್ರೀಮದ್ ಮದಾನೆಗುಂದಿ ಸರಸ್ವತಿ ಸಂಸ್ಥಾನದ ಶ್ರೀಶ್ರೀ ಮೌನೇಶ್ವರ ಮಹಾಸ್ವಾಮಿಗಳು, ಸೂರ್ಯ ನಾರಾಯಣ ಸ್ವಾಮಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ, ಸಮಾಜದ ಮುಖಂಡರಾದ ಎ. ಈರಣ್ಣ ಬಡಿಗೇರ, ವಕೀಲರಾದ ಬ್ರಹ್ಮ ಗಣೇಶ್, ಕೆ.ರಾಮು ಗಾಣಧಾಳ, ಹಿರಿಯ ಪತ್ರಕರ್ತರಾದ ಮಾರುತಿ ಬಡಿಗೇರ, ನಾಗರಾಜ ಪತ್ತಾರ್, ಡಾ.ವೆಂಕಟೇಶ ಅನ್ವರಿ, ಗಿರೀಶ್ ಆಚಾರಿ, ಜಯಂತ್ ಆಚಾರಿ, ಕೆ.ನರಸಪ್ಪ, ಮಲೇಶ, ಪ್ರಕಾಶ್ ಗುಂಜಹಳ್ಳಿ, ಸುರೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್