
ವಿಜಯಪುರ, 06 ಜನವರಿ (ಹಿ.ಸ.) :
ಆ್ಯಂಕರ್ : ರಸ್ತೆ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡುವ ಮೂಲಕ ಅಪಘಾತಗಳ ನಿಯಂತ್ರಣಕ್ಕೆ ಕೈಜೋಡಿಸಿ, ನಿಯಮಗಳ ಅನುಸರಣೆಯಿಂದ ಅಪಘಾತ ತಡೆಯಲು ಏಕೈಕ ಮಾರ್ಗವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಾ ಅಧ್ಯಕ್ಷರು ಹರೀಶ ಎ ಅವರು ಅವರು ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ,ಜಿಲ್ಲಾಡಳಿತ,ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರಿಗೆ ಇಲಾಖೆ, ಪೊಲೀಸ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ವಿಮಾ ಕಂಪನಿಗಳು, ಎನ್.ಜಿ.ಒ ಸಂಸ್ಥೆಗಳು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ 37ನೇ ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಶೇ.70ರಷ್ಟು ಅಪಘಾತಗಳು ಅತಿವೇಗದ ಚಾಲನೆಯಿಂದಲೇ ಸಂಭವಿಸಿವೆ. ಹೆಚ್ಚಿನ ಸಾವುಗಳು ಯುವ ಹಾಗೂ ಮಧ್ಯವಯಸ್ಸಿನವರಲ್ಲಿ ಸಂಭವಿಸುತ್ತಿರುವುದು ಶೋಚನೀಯವಾಗಿದೆ ಎಂದರು.
ರಸ್ತೆ ಅಪಘಾತ ತಡೆಗಟ್ಟುವುದು ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಅರಿತು, ಪಾಲನೆ ಮಾಡಬೇಕೆಂದು ಕರೆ ನೀಡಿದರು.
ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ರಸ್ತೆ ಸುರಕ್ಷತಾ ಅರಿವು ಮೂಡಿಸಬೇಕು. ಎಲ್ಲಾ ಶಾಲೆಗಳಲ್ಲಿ ನಿಯಮಿತ ಜಾಗೃತಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಡಬೇಕು. ಪಾಲಕರು ಚಿಕ್ಕ ಮಕ್ಕಳಿಗೆ ವಾಹನ ಚಾಲನೆ ಮಾಡದಂತೆ ಎಚ್ಚರಿಕೆ ವಹಿಸಬೇಕು ಕಟ್ಟುನಿಟ್ಟಾಗಿ ಈ ಕುರಿತು ಪಾಲಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ದ್ವಿಚಕ್ರ ವಾಹನ ಚಲಾಯಿಸುವಾಗ ಸುರಕ್ಷತಾ ದೃಷ್ಟಿಯಿಂದ ಹಿಂಬದಿ ಸವಾರರೂ ಸೇರಿದಂತೆ ಹೆಲ್ಮೆಟ್ ಧರಿಸಬೇಕು. ಮೋಟಾರ್ ಸೈಕಲ್ ಅಪಘಾತಗಳಲ್ಲಿ ತಲೆಗೆ ಪೆಟ್ಟು ಬಿದ್ದು ಸಾವಿನ ಪ್ರಮಾಣ ಹೆಚ್ಚಿದ್ದು, ಕೆಲವೊಮ್ಮೆ ತಲೆಗಾಗುವ ಸಣ್ಣ ಗಾಯವೂ ಅನಾಹುತ ತಂದೊಡ್ಡುತ್ತದೆ. ಈ ಕುರಿತು ಅರಿವು ಹೊಂದುವುದು ಅಗತ್ಯವಾಗಿದೆ ಎಂದು ಹೇಳಿದರು.
ನಮ್ಮ ಜೀವದ ಜೊತೆಗೆ ಇತರರ ಜೀವಕ್ಕೂ ಅಪಾಯ ಉಂಟಾಗದಂತೆ ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘಿಸಿದೇ ಅವುಗಳ ಪಾಲನೆ ಮಾಡಿ, ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೆಂದು ತಿಳಿಸಿ, ಎಲ್ಲರೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರೆ ನೀಡಿದರು.
ಜಿಲ್ಲಾಧಿಕಾರಿ ಡಾ. ಆನಂದ.ಕೆ, ಅವರು ಮಾತನಾಡಿ, ರಸ್ತೆ ಸುರಕ್ಷತೆ ನಮ್ಮಿಂದಲೇ ಆರಂಭವಾಗಬೇಕು. ತಡೆಗಟ್ಟಲು ಕೇವಲ ಸರ್ಕಾರ ಅಥವಾ ಪೊಲೀಸ್ ಇಲಾಖೆಯೇ ಜವಾಬ್ದಾರಿ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದ್ದು, ನಿಯಮಗಳ ಪಾಲಿಸಿ ಬದಲಾವಣೆಗೆ ನಾಂದಿ ಹಾಡಬೇಕು. ಶೇ.50ರಷ್ಟು ಕಡಿಮೆ ವಯೋಮಾನದವರು ಅಪಘಾತಗಳಿಗೆ ಒಳಗಾಗಗುತ್ತಿದ್ದು, ಅತಿವೇಗದ ಚಾಲನೆ ಹಾಗೂ ಟ್ರಾಫಿಕ್ ಸಿಗ್ನಲ್ ಉಲ್ಲಂಘನೆಯೇ ಅಪಘಾತಗಳ ಪ್ರಮುಖ ಕಾರಣಗಳಾಗಿದ್ದು, ಸಿಗ್ನಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಮ್ಮ ಮನಸ್ಥಿತಿ ಬದಲಾಗದ ಹೊರತು, ಪರಿಸ್ಥಿತಿ ಬದಲಾಗುವುದಿಲ್ಲ. ರಸ್ತೆ ಸುರಕ್ಷತೆ ನಮ್ಮಿಂದಲೇ ಆರಂಭವಾಗಬೇಕು. ನಮ್ಮ ನಡೆ ಇತರರಿಗೆ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.
ಸುರಕ್ಷತೆ ಅತ್ಯಂತ ಮುಖ್ಯವಾಗಿದ್ದು, ನಿಯಮ ಉಲ್ಲಂಘನೆಯ ಪರಿಣಾಮ ಪಾಲಕರಿಗೆ, ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಅತೀ ದೊಡ್ಡ ನಷ್ಟ ಉಂಟಾಗುತ್ತದೆ ಎಂದು ಹೇಳಿದರು. ಹೆಚ್ಚಾಗಿ ಅಪಘಾತಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಸಂಭವಿಸುತ್ತಿರುವುದರಿAದ ವಾಹನ ಚಾಲಕರು ಕಡ್ಡಾಯವಾಗಿ ಲೇನ್ ನಿಯಮಗಳನ್ನು ಪಾಲವನೆ ಮಾಡಬೇಕು.. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1033ಕ್ಕೆ ಕರೆ ಮಾಡಿ ತುರ್ತು ಸಂದರ್ಭಗಳಲ್ಲಿ ತಕ್ಷಣ ನೆರವು ಪಡೆಯಬಹುದೆಂದು ಹೇಳಿದರು.
ಸ್ವಂತ ಶಿಸ್ತು, ಸಂಯಮಿತ ಚಾಲನೆ ಮತ್ತು ನಿಯಮ ಪಾಲನೆಯೇ ಜೀವ ರಕ್ಷಣೆಗೆ ಅತ್ಯಂತ ಪರಿಣಾಮಕಾರಿ ಮಾರ್ಗವೆಂದು ಜಿಲ್ಲಾಧಿಕಾರಿಗಳು ಹೇಳಿದರು.ರಸ್ತೆ ಅಪಘಾತಗಳು ಹೊಸ ಸವಾಲಾಗಿ ಪರಿಣಮಿಸಿದ್ದು, ತಡೆಗಟ್ಟಲು ಸಾರ್ವಜನಿಕ ಸಹಭಾಗಿತ್ವ ಅತ್ಯಗತ್ಯವೆಂದು ಅವರು ಹೇಳಿದರು. ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಗುರಿಯೊಂದಿಗೆ ಸರ್ಕಾರ ನಡೆಸುತ್ತಿರುವ ಅಭಿಯಾನಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಸಂಚಾರ ನಿಯಮಗಳನ್ನು ಪಾಲಿಸುವುದರ ಮೂಲಕ ನಮ್ಮ ಜೀವವನ್ನೂ, ಇತರರ ಜೀವವನ್ನೂ ರಕ್ಷಿಸುವ ಜವಾಬ್ದಾರಿ ನಮ್ಮದೆಯೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪೊಲೀಸ್ ವರಿಷ್ಠಾಧಿಕಾರಿಯಾದ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ,ಕಾನೂನಿನ ಅರಿವು-ನೆರವು ಮತ್ತು ಜಾಗೃತಿ ನಿರಂತರವಾಗಿರಬೇಕು. ಸಂಚಾರಿ ನಿಯಮಗಳ ಅರಿವು ಸಮಾಜದ ಕೊನೆಯ ವ್ಯಕ್ತಿಗೂ ತಲುಪಬೇಕು ಎಂದು ಅವರು ಹೇಳಿದರು. ರಸ್ತೆ ಅಪಘಾತಗಳನ್ನು ತಡೆಯಲು ಸಾರ್ವಜನಿಕರ ಶೇ.90ರಷ್ಟು ಸಹಭಾಗಿತ್ವ ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ರಸ್ತೆ ಅಪಘಾತಗಳ ಸಂದರ್ಭದಲ್ಲಿ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದ್ದು, ವಿವಿಧ ಇಲಾಖೆಗಳ ಸಮನ್ವಯ ಅಗತ್ಯವಿದೆ ಎಂದು ತಿಳಿಸಿದರು.
ಶಿಕ್ಷಣ ಇಲಾಖೆ ಮಕ್ಕಳಲ್ಲಿ ಮತ್ತು ಯುವಕರಲ್ಲಿ ಸಂಚಾರಿ ನಿಯಮಗಳ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು. ಅಪಘಾತ ಸಂಭವಿಸಿದಾಗ ವಿಡಿಯೋ ತೆಗೆಯುವುದಕ್ಕಿಂತ ಗಾಯಾಳುಗಳಿಗೆ ತಕ್ಷಣ ನೆರವು ನೀಡಬೇಕು. ಸರ್ಕಾರ ಗುರುತಿಸಿರುವಂತೆ ಸಹಾಯಕ್ಕೆ ಹೋದವರಿಗೆ ಕಾನೂನು ತೊಂದರೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಪಘಾತದ ಬಳಿಕದ ಗೋಲ್ಡನ್ ಅವರ್ ಅತಿ ಮಹತ್ವದ ಸಮಯವಾಗಿದ್ದು, ಒಂದು ಗಂಟೆಯೊಳಗೆ ಸೂಕ್ತ ಚಿಕಿತ್ಸೆ ದೊರೆತರೆ ಪ್ರಾಣ ಉಳಿಸುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಹೇಳಿದರು. ಸಂಚಾರಿ ನಿಯಮಗಳು ನಿಮ್ಮ ಸುರಕ್ಷತೆಗಾಗಿ ಇದ್ದು, ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕು. ಜೀವನ ಅಮೂಲ್ಯವಾದದ್ದು ಹೆಲ್ಮೆಟ್ ಧರಿಸಿ, ಜವಾಬ್ದಾರಿಯುತವಾಗಿ ವಾಹನ ಚಲಾಯಿಸಿ ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮವನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ರಾಜಶೇಖರ ಧೈವಾಡಿ ಅವರು ಯಶಸ್ವಿಯಾಗಿ ನಿರ್ವಹಿಸಿದರು.
ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್. ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ,ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಸೀಂಬಾಬಾ ಮುದ್ದೇಬಿಹಾಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರ್ಯಪಾಲಕ ಅಭಿಯಂತರ ವಿಜಯ ಪಾಟೀಲ, ಬಾಗಲಕೋಟೆ ವಿಭಾಗ-1ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪವನ ಗುರುವೆ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ, ವಿಜಯಪುರ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧೀಕಾರಿ ನಾರಾಯಣಪ್ಪ ಕುರಬರ, ಜಿಲ್ಲಾ ನ್ಯಾಯವಾದಿಗಳ ಸಂಘ ಅಧ್ಯಕ್ಷ ಡಿ.ಜಿ.ಬಿರಾದಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಅಮರೇಶ ದೊಡಮನಿ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪಸ್ಥಿತರಿದರು.
ಜನಜಾಗೃತಿ ಜಾಥಾ : ಜನಜಾಗೃತಿ ಜಾಥಾದ ಮೂಲಕ ಸಾರ್ವಜನಿಕರಿಗೆ ಸಂದೇಶ, ರಸ್ತೆ ಅಪಘಾತಗಳ ನಿಯಂತ್ರಣ ಹಾಗೂ ಜೀವ ರಕ್ಷಣೆಯ ಮಹತ್ವವನ್ನು ಮನವರಿಕೆ ಮಾಡುವ ಉದ್ದೇಶದಿಂದ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಈ ಜಾಥಾವನ್ನು ಗೌರವಾನ್ವಿತ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್. ಹಾಗರಗಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಚಾಲನೆ ನೀಡಿದರು. ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ ನಂತರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande