
ಬೆಳಗಾವಿ, 16 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ 50 ಹಾಸಿಗೆಗಳ ತೀವ್ರ ನಿಗಾ ಘಟಕ (ಐಸಿಯು) ನಿರ್ಮಾಣ ಕಾಮಗಾರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ₹23.75 ಕೋಟಿ ವೆಚ್ಚದಲ್ಲಿ ಬೈಲಹೊಂಗಲದ ತಾಲೂಕು ಆಸ್ಪತ್ರೆ ಆವರಣದಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆ ಜಾರಿಯಾದ ನಂತರ ತುರ್ತು ಚಿಕಿತ್ಸೆಗೆ ಅಗತ್ಯವಾದ ಆಧುನಿಕ ವೈದ್ಯಕೀಯ ಸೌಲಭ್ಯಗಳು ಸ್ಥಳೀಯ ಮಟ್ಟದಲ್ಲೇ ಲಭ್ಯವಾಗಲಿದ್ದು, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ತಕ್ಷಣ ಹಾಗೂ ಉತ್ತಮ ಚಿಕಿತ್ಸೆ ಸಿಗಲಿದೆ.
ಗ್ರಾಮೀಣ ಪ್ರದೇಶದ ಜನರು ಸಣ್ಣ-ಪುಟ್ಟ ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳಿಗಾಗಿ ದೂರದ ನಗರಗಳಿಗೆ ತೆರಳಬೇಕಾದ ಅನಿವಾರ್ಯತೆ ಕಡಿಮೆಯಾಗಲಿದೆ. ತುರ್ತು ಪರಿಸ್ಥಿತಿಗಳಲ್ಲಿ ಸಮಯೋಚಿತ ಚಿಕಿತ್ಸೆ ಲಭ್ಯವಾಗುವುದರಿಂದ ಜೀವ ರಕ್ಷಣೆ ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಎಸ್. ಕೌಜಲಗಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa