

ಗದಗ, 16 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಪುರಾತನ ಕಾಲದ ದೇವರ ಮೂರ್ತಿಗಳ ಧ್ವಂಸ ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪುರಾತನ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿತವಾಗಿದ್ದ ಶಿವಲಿಂಗ, ನಂದಿ ಮೂರ್ತಿ ಹಾಗೂ ಹೊನ್ನತ್ತೆಮ್ಮ ದೇವಿಯ ಮೂರ್ತಿಗಳನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಭಗ್ನಗೊಳಿಸಿದ್ದಾರೆ.
ನಿನ್ನೆ ಮಹಾಶಿವರಾತ್ರಿ ದಿನವೇ ಈ ದುಷ್ಕೃತ್ಯ ನಡೆದಿರುವುದು ಗ್ರಾಮಸ್ಥರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಈ ಕೃತ್ಯವನ್ನು ಮತಾಂಧ ಶಕ್ತಿಗಳ ಕೃತ್ಯವೆಂದು ಗ್ರಾಮಸ್ಥರು ಆರೋಪಿಸಿದ್ದು, ತಕ್ಷಣವೇ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಬೇಕೆಂದು ಪೊಲೀಸರ ಮೇಲೆ ಒತ್ತಾಯ ಹೇರಿದ್ದಾರೆ.
ಘಟನಾ ಸ್ಥಳಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಭೇಟಿ ನೀಡಿ, ಧ್ವಂಸಗೊಂಡ ದೇವರ ಮೂರ್ತಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ದೇವಾಲಯದ ಜೀರ್ಣೋದ್ಧಾರ ಹಾಗೂ ಭಗ್ನಗೊಂಡ ಮೂರ್ತಿಗಳ ಪುನಃ ಸ್ಥಾಪನೆಗೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಇದೇ ವೇಳೆ, ದೇವರ ಮೂರ್ತಿಗಳನ್ನು ಪುನಃ ಪ್ರತಿಷ್ಠಾಪಿಸಿ, ರಾಮಲಿಂಗೇಶ್ವರ ದೇವಸ್ಥಾನದ ಸಂಪೂರ್ಣ ಜೀರ್ಣೋದ್ಧಾರ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟಕ್ಕೆ ಇಳಿಯುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.
ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತಂದಿರುವ ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP