
ಬೆಂಗಳೂರು, 18 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮೂರ್ಛೆ ರೋಗ, ಮರೆವಿನ ಕಾಯಿಲೆ, ಪಾರ್ಶ್ವವಾಯು ಹಾಗೂ ತಲೆನೋವಿನಂತಹ ನರವೈಜ್ಞಾನಿಕ ಕಾಯಿಲೆಗಳ ತಡೆ, ಆರಂಭಿಕ ಪತ್ತೆ ಮತ್ತು ಸಮಗ್ರ ಚಿಕಿತ್ಸೆಯನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರವು ‘Karnataka Brain Health Initiative (KaBHI)’ ಯೋಜನೆಯನ್ನು ಆರಂಭಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡ ಅವರು, ಈ ಯೋಜನೆಗೆ ನಿಮಾನ್ಸ ತಾಂತ್ರಿಕ ಮಾರ್ಗದರ್ಶನ ಮತ್ತು ಸಹಕಾರ ನೀಡುತ್ತಿದೆ ಎಂದರು. ರಾಜ್ಯದ 33 ಜಿಲ್ಲಾ ಆಸ್ಪತ್ರೆಗಳಲ್ಲಿ ಮಿದುಳು ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲೇ ಬ್ರೈನ್ ಹೆಲ್ತ್ ಕ್ಲಿನಿಕ್ ಸ್ಥಾಪನೆ, ವೈದ್ಯರಿಗೆ ವಿಶೇಷ ತರಬೇತಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೇ ನರ ಸಂಬಂಧಿತ ಸಮಸ್ಯೆಗಳಿಗೆ ಚಿಕಿತ್ಸೆ ತಲುಪಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದರು.
2024ರ ಏಪ್ರಿಲ್ನಿಂದ 2025ರ ಡಿಸೆಂಬರ್ ವರೆಗೆ ಸುಮಾರು 4.71 ಲಕ್ಷಕ್ಕೂ ಅಧಿಕ ತಪಾಸಣೆಗಳನ್ನು ನಡೆಸಲಾಗಿದ್ದು, 1.95 ಲಕ್ಷಕ್ಕೂ ಹೆಚ್ಚು ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಮಿದುಳು ಆರೋಗ್ಯ ಸೇವೆ ವಿಸ್ತರಣೆಗೆ ಇದು ಮಹತ್ವದ ಸಾಧನೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿ ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಬ್ರೈನ್ ಹೆಲ್ತ್ ಸೇವೆ ತಲುಪಿಸುವ ಬದ್ಧತೆಯೊಂದಿಗೆ ಯೋಜನೆಯನ್ನು ಮುಂದುವರಿಸಲಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗುವ ದಿಸೆಯಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa