
ನವದೆಹಲಿ, 21 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಜಧಾನಿ ದೆಹಲಿಯಲ್ಲಿ ಭಯೋತ್ಪಾದಕ ದಾಳಿಯ ಸಾಧ್ಯತೆಯ ಕುರಿತು ಗುಪ್ತಚರ ಎಚ್ಚರಿಕೆ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿಸಲಾಗಿದೆ. ಐತಿಹಾಸಿಕ ಕೆಂಪು ಕೋಟೆ ಹಾಗೂ ಜನಸಂದಣಿಯಿಂದ ಕೂಡಿದ ಚಾಂದನಿ ಚೌಕ್ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿ, ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.
ಮೂಲಗಳ ಪ್ರಕಾರ, ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ ಲಷ್ಕರ್-ಎ-ತೈಬಾ (ಎಲ್ಇಟಿ) ಐಇಡಿ ದಾಳಿಯನ್ನು ರೂಪಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಶೇಷವಾಗಿ ಚಾಂದನಿ ಚೌಕ್ನಲ್ಲಿರುವ ಪ್ರಮುಖ ಧಾರ್ಮಿಕ ಸ್ಥಳವೊಂದನ್ನು ಗುರಿಯಾಗಿಸಬಹುದೆಂಬ ಸುಳಿವುಗಳಿವೆ. ಆದರೆ ಯಾವುದೇ ನಿರ್ದಿಷ್ಟ ಸ್ಥಳವನ್ನು ಅಧಿಕಾರಿಗಳು ಅಧಿಕೃತವಾಗಿ ದೃಢಪಡಿಸಿಲ್ಲ.
ಇತ್ತೀಚೆಗೆ ಇಸ್ಲಾಮಾಬಾದ್ನಲ್ಲಿ ನಡೆದ ಸ್ಫೋಟದ ಬಳಿಕ, ಭಾರತದಲ್ಲಿಯೂ ದೊಡ್ಡ ಮಟ್ಟದ ದಾಳಿ ನಡೆಸುವ ಸಂಚು ರೂಪಿಸಲಾಗುತ್ತಿದೆ ಎಂಬ ಗುಪ್ತಚರ ವರದಿ ಬಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿನ್ನೆಲೆ ದೆಹಲಿ ಪೊಲೀಸರು ಹಾಗೂ ಕೇಂದ್ರ ಭದ್ರತಾ ಸಂಸ್ಥೆಗಳು ತಕ್ಷಣ ಕ್ರಮ ಕೈಗೊಂಡಿವೆ.
ಕೆಂಪು ಕೋಟೆ, ಚಾಂದನಿ ಚೌಕ್ ಹಾಗೂ ಸುತ್ತಮುತ್ತಲಿನ ಮಾರುಕಟ್ಟೆ, ಪಾರ್ಕಿಂಗ್ ಸ್ಥಳಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa