
ಹಾಸನ, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಬದಲಾದ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತಾಂತ್ರಿಕತೆಯಾಗಿದೆ ಎಂದು ಹಾಸನದ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ತಿಳಿಸಿದರು.
ಹಾಸನ ಆಕಾಶವಾಣಿ ರೇಡಿಯೊ ಕಿಸಾನ್ ದಿವಸದ ಅಂಗವಾಗಿ ಏರ್ಪಡಿಸಿದ್ದ ಕೃತಕ ಬುದ್ಧಿಮತ್ತೆ ಹಾಗೂ ಕೃಷಿ ಅಭಿವೃದ್ಧಿ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹವಾಮಾನ ಮುನ್ಸೂಚನೆ, ಮಣ್ಣು ಪರೀಕ್ಷೆ, ಬೆಳೆ ಸಂರಕ್ಷಣೆ ಹಾಗೂ ಮಾರುಕಟ್ಟೆ ದರಗಳ ವಿಶ್ಲೇಷಣೆಯಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ರೈತರ ಕೃಷಿ ಚಟುವಟಿಕೆಗಳು ಹಾಗೂ ರೈತರ ಆದಾಯದ ದ್ವಿಗುಣಕ್ಕೆ ಹೆಚ್ಚು ಸಹಾಯ ಮಾಡುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
50ರ ದಶಕದಿಂದಲೂ ಆಕಾಶವಾಣಿ ಕೃಷಿ ಸೇರಿದಂತೆ ಇತರೆ ತಂತ್ರಜ್ಞಾನಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಪರಿಪಾಠ ಬೆಳೆಸಿಕೊಂಡಿದ್ದು ಇದು ಇಂದಿಗೂ ಮುಂದುವರೆದಿರುವುದು ಮೆಚ್ಚುಗೆಯ ಸಂಗತಿ ಎಂದು ಅವರು ಶ್ಲಾಘಿಸಿದರು.
ಹಾಸನ ಆಕಾಶವಾಣಿ ಕೃಷಿಕರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಬಗ್ಗೆ ಜಾಗೃತಿ ಮೂಡಿಸುವಂತಹ ವಿಚಾರ ಸಂಕಿರಣ ಏರ್ಪಡಿಸಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಅವರು ಹೇಳಿದರು.
ವಿಚಾರಗೋಷ್ಠಿಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಕೃಷಿ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ಬೆಂಗಳೂರಿನ ಎಐ ವಿನ್ಯಾಸಕರಾದ ಎನ್. ಜಿ. ಕಿರಣ್ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಡಾ. ಪಿ. ರಮೇಶ್ ಕುಮಾರ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಎಚ್.ಆರ್. ಯೋಗೇಶ್, ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಸುಜಾತ ಎಫ್ ತಳವಾರ್, ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಅರಕಲಗೂಡು ವಿ. ಮಧುಸೂದನ್ ಹಾಗೂ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳ ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa