
ಶಿವಮೊಗ್ಗ, 28 ಫೆಬ್ರವರಿ (ಹಿ.ಸ.):
ಆ್ಯಂಕರ್:
ಶಿವಮೊಗ್ಗ ಜಿಲ್ಲೆಯ ಸೂಳೆಬೈಲು ಗ್ರಾಮದಲ್ಲಿ ಅಪ್ರಾಪ್ತ ದುಷ್ಕರ್ಮಿಗಳಿಂದ ಹತ್ಯೆಯಾದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ದುರ್ಘಟನೆಯಿಂದ ಇನ್ನೂ ತೀವ್ರ ಆಘಾತದಲ್ಲಿರುವ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು, ನ್ಯಾಯ ಸಿಗುವವರೆಗೂ ಪಕ್ಷ ಹೋರಾಟ ಮುಂದುವರಿಸುವುದಾಗಿ ಭರವಸೆ ನೀಡಿದರು.
ಹಲ್ಲೆಯ ಸಂದರ್ಭದಲ್ಲಿ ಗಾಯಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿ ಗಿರೀಶ್ ಮನೆಗೂ ಭೇಟಿ ನೀಡಿದ ವಿಜಯೇಂದ್ರ, ಗಾಯಾಳುವಿನ ಆರೋಗ್ಯ ವಿಚಾರಿಸಿ, ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. “ನಮ್ಮ ಪಕ್ಷ ಹಾಗೂ ಇಡೀ ಸಮಾಜ ನಿಮ್ಮೊಂದಿಗಿದೆ. ಯಾವುದೇ ಆತಂಕ ಪಡಬೇಕಾಗಿಲ್ಲ,” ಎಂದು ಅವರು ಹೇಳಿದರು.
ನಾಗರಿಕ ಸಮಾಜ ಬೆಚ್ಚಿಬೀಳುವಂತೆ ಅಪ್ರಾಪ್ತರೇ ಇಂತಹ ಕ್ರೂರ ಕೃತ್ಯಗಳಲ್ಲಿ ತೊಡಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ವಿಜಯೇಂದ್ರ ಆತಂಕ ವ್ಯಕ್ತಪಡಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಅವರು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa