
ಬೆಂಗಳೂರು, 11 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಹಿಂದಿನ ತಿಂಗಳ ವೇತನ ವಿಳಂಬವಾಗಿದೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದಾಖಲೆ ಮೊತ್ತದ ಬಜೆಟ್ ಮಂಡಿಸಿರುವುದಾಗಿ ಹೇಳಿಕೊಳ್ಳುತ್ತಿರುವ ಸರ್ಕಾರದ ಆರ್ಥಿಕ ಸ್ಥಿತಿ ವಾಸ್ತವದಲ್ಲಿ ದುರ್ಬಲವಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿ ರಾಜ್ಯದ ಆರ್ಥಿಕತೆ ಸದೃಢವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಹಿಂದಿನ ತಿಂಗಳ ವೇತನ ನೀಡಲು ಸಾಧ್ಯವಾಗಿಲ್ಲ ಎಂಬ ವರದಿಗಳು ಸರ್ಕಾರದ ಅವಾಸ್ತವಿಕತೆಯನ್ನು ಬಯಲಿಗೆಳೆದಿವೆ ಎಂದು ಅವರು ಹೇಳಿದ್ದಾರೆ.
ಹುಬ್ಬಳ್ಳಿ-ಧಾರವಾಡ, ಬಳ್ಳಾರಿ, ವಿಜಯನಗರ, ಕಲಬುರ್ಗಿ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾವಿರಾರು ಪೊಲೀಸರು ಸಂಬಳವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ ಅವರು, ಸುಳ್ಳು ಪ್ರಚಾರಕ್ಕೆ ಕೋಟಿ ಕೋಟಿ ವೆಚ್ಚ ಮಾಡುವ ಕಾಂಗ್ರೆಸ್ ಸರ್ಕಾರಕ್ಕೆ ಹಗಲಿರುಳು ಸೇವೆ ಸಲ್ಲಿಸುವ ಪೊಲೀಸ್ ಸಿಬ್ಬಂದಿಗೆ ವೇತನ ನೀಡಲು ಹಣವಿಲ್ಲ ಎಂಬುದು ವಿಷಾದಕರ ಸಂಗತಿ ಎಂದು ಟೀಕಿಸಿದ್ದಾರೆ.
ಒಂದು ಕಡೆ ದಾಖಲೆ ಬಜೆಟ್ ಘೋಷಣೆ, ಮತ್ತೊಂದು ಕಡೆ ಸಂಬಳಕ್ಕಾಗಿ ಪೊಲೀಸರ ಪರದಾಟ ನಡೆಯುತ್ತಿರುವುದು ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಸರ್ಕಾರವು ತಕ್ಷಣವೇ ಪೊಲೀಸ್ ಸಿಬ್ಬಂದಿಯ ಬಾಕಿ ವೇತನ ಬಿಡುಗಡೆ ಮಾಡಿ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa