
ಬಾಗಲಕೋಟೆ, 12 ಮಾರ್ಚ್ (ಹಿ.ಸ.)
ಆ್ಯಂಕರ್ : ಬಸವ ತತ್ವದ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಕನ್ನೇರಿ ಶ್ರೀಗಳ ಭಾಷಣದ ವಿರುದ್ಧ ಶಾಸಕ ವಿಜಯಾನಂದ ಕಾಶಪ್ಪನವರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಖಾವಿ ಹಾಕಿದ ತಕ್ಷಣ ಬಾಯಿಗೆ ಬಂದಂತೆ ಮಾತಾಡುವುದೇನು? ಇದು ಬಸವಣ್ಣನ ನಾಡು, ಇಲ್ಲಿ ದ್ವೇಷದ ರಾಜಕಾರಣ ನಡೆಯುವುದಿಲ್ಲ” ಎಂದು ಕಾಶೆಪ್ಪನವರ್ ಪ್ರಕಟಣೆ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಸವ ತತ್ವಗಳು ಸಮಾನತೆ, ಸಹಿಷ್ಣುತೆ ಮತ್ತು ಮಾನವೀಯತೆಯನ್ನು ಸಾರುತ್ತವೆ. ಇಂತಹ ನಾಡಿನಲ್ಲಿ ದ್ವೇಷ ಹುಟ್ಟುಹಾಕುವ ಭಾಷಣಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇದೆ ಎಂದು ಹೇಳಿದರು.
ನಿಜಗುಣಾನಂದ ಶ್ರೀಗಳು ಅವರ ವಿರುದ್ಧ ಹಲ್ಲೆಗೆ ಸಂಚು ನಡೆಯುತ್ತಿದೆ ಎಂಬ ಆತಂಕವೂ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಬಸವ ಪಥದ ಮೌಲ್ಯಗಳನ್ನು ಕಾಪಾಡುವ ಹೊಣೆಗಾರಿಕೆ ಎಲ್ಲರ ಮೇಲೂ ಇದೆ. ಧರ್ಮ ಮತ್ತು ಸಮಾಜದ ಹೆಸರಿನಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಅವರು ಹೇಳಿದರು.
ಈ ಘಟನೆಗೆ ಸಂಬಂಧಿಸಿ ಲಿಂಗಾಯತ ಸಮುದಾಯದ ಹಲವಾರು ಮುಖಂಡರು ಮತ್ತು ಬಸವ ಅನುಯಾಯಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬಸವ ತತ್ವದ ವಿರುದ್ಧದ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು ಎಂಬ ಆಗ್ರಹವೂ ಕೇಳಿ ಬಂದಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande