
ನವದೆಹಲಿ, 18 ಮಾರ್ಚ್ (ಹಿ.ಸ.):
ಆ್ಯಂಕರ್:
ಸರ್ಕಾರದ ಯೋಜನೆಗಳಿಗೆ ಸಹಕಾರ ನೀಡದವರಿಗೆ ತಕ್ಕ ಉತ್ತರ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಕೈಡೆಕ್ ನಿರ್ಮಾಣಕ್ಕಾಗಿ ಕಳೆದ ಎರಡೂವರೆ ವರ್ಷಗಳಿಂದ ಪ್ರಯತ್ನಿಸಲಾಗುತ್ತಿದ್ದರೂ, ಇದೀಗ ಕೆಂಪೇಗೌಡ ಲೇಔಟ್ ನಲ್ಲಿ ಯೋಜನೆ ಕೈಗೊಳ್ಳಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ವಿಮಾನ ನಿಲ್ದಾಣದ ಸುತ್ತಮುತ್ತ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸ್ಕೈಡೆಕ್ ನಿರ್ಮಾಣ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಎನ್ಜಿಎಫ್ ಪ್ರದೇಶ ಬಳಿ ನಿರ್ಮಾಣಕ್ಕೆ ಸೂಕ್ತ ಸ್ಥಳವಿದ್ದು, ಮೆಟ್ರೋ ಸೌಲಭ್ಯವೂ ಇದೆ. ಜೊತೆಗೆ ಸೋಂಪುರ ವೃತ್ತ ಸಮೀಪದಲ್ಲೂ ನಿರ್ಮಾಣಕ್ಕೆ ಸಲಹೆ ನೀಡಲಾಗಿತ್ತು. ಆದರೆ ನೈಸ್ ಸಂಸ್ಥೆ ಸಹಕಾರ ನೀಡದೆ ನಿರಾಕ್ಷೇಪಣ ಪತ್ರ ನೀಡಿಲ್ಲ ಎಂದು ಆರೋಪಿಸಿದರು.
ಈ ವಿಚಾರದಲ್ಲಿ ಮುಂದಿನ ಕ್ರಮವನ್ನು ಶೀಘ್ರದಲ್ಲೇ ತೀರ್ಮಾನಿಸಲಾಗುತ್ತದೆ. ಸರ್ಕಾರಕ್ಕೆ ಸಹಕಾರ ನೀಡದವರಿಗೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಇದಲ್ಲದೆ, ಅಂತಾರಾಷ್ಟ್ರೀಯ ಹಾಗೂ ದೇಶೀಯ ಮಾರ್ಗಸೂಚಿಗಳ ಕುರಿತು ಅಧ್ಯಯನ ನಡೆಯುತ್ತಿದ್ದು, ಕೇಂದ್ರ ಸಚಿವರು ಮುಂದಿನ ವಾರ ಸಭೆ ನಡೆಸಲು ಸೂಚಿಸಿದ್ದಾರೆ. ಅಧಿಕಾರಿಗಳಿಗೂ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ಬಿಸಿನೆಸ್ ಕಾರಿಡಾರ್ ಅಭಿವೃದ್ಧಿಯ ಹಿನ್ನಲೆಯಲ್ಲಿ ಭೂ ಸಂತ್ರಸ್ತರು ತಮ್ಮ ಜಾಗಗಳಲ್ಲಿ ಕಟ್ಟಡ ನಿರ್ಮಿಸಲು ಮುಂದಾಗುತ್ತಾರೆ. ಈ ವೇಳೆ ಎತ್ತರದ ಮಿತಿ ಹೇರಿಕೆಯಾಗಿದ್ದರೆ ಸಮಸ್ಯೆಯಾಗುತ್ತದೆ ಎಂಬುದನ್ನು ಗಮನಕ್ಕೆ ತರಲಾಗಿದೆ ಎಂದು ಡಿಕೆಶಿ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa