
ಹುಬ್ಬಳ್ಳಿ, 02 ಮಾರ್ಚ್ (ಹಿ.ಸ.):
ಆ್ಯಂಕರ್:ಧಾರವಾಡದಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ವಲಯ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದರು. ಇದೀಗ ಸರ್ಕಾರ ಸ್ಥಳಾಂತರ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವುದಾಗಿ ಅವರು ತಿಳಿಸಿದ್ದಾರೆ.
ಸುಮಾರು ನಾಲ್ವತ್ತು ವರ್ಷಗಳ ಇತಿಹಾಸ ಹೊಂದಿರುವ ಧಾರವಾಡದ ಕೆಐಎಡಿಬಿ ವಲಯ ಕಚೇರಿ, ಉತ್ತರ ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಪ್ರಮುಖ ಕೇಂದ್ರವಾಗಿದ್ದು, ವಿಶೇಷವಾಗಿ ಧಾರವಾಡ ಜಿಲ್ಲೆಯ ಕೈಗಾರಿಕಾ ಚಟುವಟಿಕೆಗಳಿಗೆ ಸಂಬಂಧಿಸಿದ ಏಕೈಕ ವಲಯ ಕಚೇರಿಯಾಗಿದೆ. ಇಂತಹ ಪ್ರಮುಖ ಕಚೇರಿಯನ್ನು ಸ್ಥಳಾಂತರಿಸುವುದರಿಂದ ಉತ್ತರ ಕರ್ನಾಟಕದ ಕೈಗಾರಿಕಾ ವಲಯಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಜೋಶಿ ಅಭಿಪ್ರಾಯಪಟ್ಟಿದ್ದರು.
ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ ಅವರು, ಆಡಳಿತಾತ್ಮಕ ಅಗತ್ಯವಿದ್ದಲ್ಲಿ ಈಗಿರುವ ಕಚೇರಿಗಳನ್ನು ಸ್ಥಳಾಂತರಿಸದೆ, ಉತ್ತರ ಕರ್ನಾಟಕದ ಪ್ರಮುಖ ನಗರಗಳಲ್ಲಿ ಹೊಸ ಕಚೇರಿಗಳನ್ನು ಆರಂಭಿಸುವ ಮೂಲಕ ಕೈಗಾರಿಕಾ ಬೆಳವಣಿಗೆಗೆ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದರು.
ಜೋಶಿಯವರ ಮನವಿಗೆ ಸ್ಪಂದಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಧಾರವಾಡದ ಕೆಐಎಡಿಬಿ ವಲಯ ಕಚೇರಿ ಸ್ಥಳಾಂತರ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಜೋಶಿ ಅವರು ಸಚಿವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa