
ಬೆಂಗಳೂರು, 20 ಮಾರ್ಚ್ (ಹಿ.ಸ.):
ಆ್ಯಂಕರ್:
ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಹೈಕೋರ್ಟ್ ನೀಡಿದ ಟೀಕೆಯನ್ನು ಆಧರಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, “ರಾಜ್ಯದ ಖಜಾನೆ ಸಂಪೂರ್ಣ ದಿವಾಳಿ ಸ್ಥಿತಿಯಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಗಾವಣೆ ದಂಧೆಯಲ್ಲೇ ತೊಡಗಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.
ಹೈಕೋರ್ಟ್ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವುದನ್ನು ಉಲ್ಲೇಖಿಸಿದ ಅಶೋಕ್, “ಮುಖ್ಯಮಂತ್ರಿಗಳಿಗೆ ಸರ್ಕಾರಿ ನೌಕರರ ವರ್ಗಾವಣೆಗಿಂತ ಇನ್ನೂ ಪ್ರಮುಖ ಕಾರ್ಯಗಳಿವೆ ಎಂದು ನ್ಯಾಯಾಲಯ ಸೂಚಿಸಿರುವುದು ರಾಜ್ಯದ ದುರಾಡಳಿತಕ್ಕೆ ಸಾಕ್ಷಿ” ಎಂದು ಹೇಳಿದ್ದಾರೆ.
ಮುಂದುವರೆದು, “ರಾಜ್ಯದಲ್ಲಿ ವರ್ಗಾವಣೆ ದಂಧೆ ತಾಂಡವವಾಡುತ್ತಿದ್ದು, ಆಡಳಿತ ಸಂಪೂರ್ಣ ಕುಸಿದಿದೆ. ಸರ್ಕಾರಕ್ಕೆ ಸ್ವಲ್ಪವಾದರೂ ನಾಚಿಕೆ ಇದ್ದರೆ ತಕ್ಷಣ ವಿಧಾನಸಭೆ ವಿಸರ್ಜನೆ ಮಾಡಿ ಜನರ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa