
ಶಿವಮೊಗ್ಗ, 20 ಮಾರ್ಚ್ (ಹಿ.ಸ.):
ಆ್ಯಂಕರ್:
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟ ದುರ್ದೈವಿ. ಇವರು ಪಶುವೈದ್ಯೆಯಾಗಿ ಆಯ್ಕೆಯಾಗಿದ್ದು, ತರಬೇತಿ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
ಗುರುವಾರ ರಾತ್ರಿ ಸುಮಾರು 10.30ರ ವೇಳೆಗೆ ಮೃಗಾಲಯದ ಆಸ್ಪತ್ರೆಗೆ ‘ಸನ್ ಕಾನರ್’ ಹಕ್ಕಿಗೆ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಳಿಕ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದೊಳಗೆ ಪ್ರವೇಶಿಸಿದ್ದರು. ಇದೇ ಸಂದರ್ಭದಲ್ಲಿ ನೀರಾನೆ ಏಕಾಏಕಿ ದಾಳಿ ನಡೆಸಿದೆ.
ರಾತ್ರಿ 11.45ರ ಸುಮಾರಿಗೆ ಗಂಭೀರವಾಗಿ ಗಾಯಗೊಂಡ ಡಾ. ಸಮೀಕ್ಷಾ ರೆಡ್ಡಿ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ತುರ್ತಾಗಿ ಶಸ್ತ್ರಚಿಕಿತ್ಸೆಯನ್ನೂ ನಡೆಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರು ಎಳೆದಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa