ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 10ಮಂದಿ ಸಜೀವ ದಹನ, 20ಕ್ಕೂ ಹೆಚ್ಚು ಗಾಯ
ಹೈದರಾಬಾದ್, 26 ಮಾರ್ಚ್ (ಹಿ.ಸ.): ಆ್ಯಂಕರ್: ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 10 ಪ್ರಯಾಣಿಕರು ಸಜೀವ ದಹನಗೊಂಡು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಾಥ
Accident


ಹೈದರಾಬಾದ್, 26 ಮಾರ್ಚ್ (ಹಿ.ಸ.):

ಆ್ಯಂಕರ್:

ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 10 ಪ್ರಯಾಣಿಕರು ಸಜೀವ ದಹನಗೊಂಡು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಳಿಗ್ಗೆ 6.00ರಿಂದ 6.30ರ ನಡುವೆ ಈ ದುರಂತ ಸಂಭವಿಸಿದೆ. ತೆಲಂಗಾಣದ ನಿರ್ಮಲ್ ನಿಂದ ನೆಲ್ಲೂರು ಕಡೆಗೆ ತೆರಳುತ್ತಿದ್ದ ಹರಿಕೃಷ್ಣ ಟ್ರಾವೆಲ್ಸ್ ಖಾಸಗಿ ಬಸ್ ತಿರುಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಟಿಪ್ಪರ್ ಟ್ರಕ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ತಕ್ಷಣವೇ ಬೆಂಕಿಗಾಹುತಿಯಾಗಿದ್ದು, ಬಸ್ಸಿನ ಹಿಂಭಾಗದಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡರು. ಇದರಿಂದಾಗಿ 10 ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ವೇಳೆ ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಮುಂಭಾಗದಲ್ಲಿದ್ದ ಸುಮಾರು 10 ಮಂದಿ ಮಾತ್ರ ಪಾರಾಗಲು ಸಾಧ್ಯವಾಗಿದ್ದು, ಉಳಿದವರು ಬೆಂಕಿಯಲ್ಲಿ ಸಿಲುಕಿಕೊಂಡರು.

ಗಾಯಗೊಂಡ ಸುಮಾರು 20 ಮಂದಿಯನ್ನು ಮಾರ್ಕಾಪುರಂನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಆತಂಕಕಾರಿಯಾಗಿದೆ.

ಈ ಘಟನೆಗೆ ಸಂಬಂಧಿಸಿ ಎನ್. ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಪರಿಶೀಲಿಸಿರುವ ಅವರು, ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸಲು ಸೂಚನೆ ನೀಡಿದ್ದಾರೆ.

ಸ್ಥಳೀಯ ಶಾಸಕ ಕಂದುಲ ನಾರಾಯಣ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದ್ದಾರೆ. ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande