
ನವದೆಹಲಿ, 26 ಮಾರ್ಚ್ (ಹಿ.ಸ.):
ಆ್ಯಂಕರ್:
ಆಂಧ್ರಪ್ರದೇಶದ ಮಾರ್ಕಾಪುರಂನಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮಾಜಿಕ ಜಾಲತಾಣದಲ್ಲಿ, “ಮಾರ್ಕಾಪುರಂನಲ್ಲಿ ಸಂಭವಿಸಿದ ದುರಂತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಆಳವಾದ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ” ಎಂದು ತಿಳಿಸಿದ್ದಾರೆ.
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಕೂಡ ದುಃಖ ವ್ಯಕ್ತಪಡಿಸಿ, “ಈ ದುರಂತವು ಅತ್ಯಂತ ನೋವುಂಟುಮಾಡಿದೆ. ಮೃತರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳಿವೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ” ಎಂದು ಹೇಳಿದ್ದಾರೆ.
ಇನ್ನೂ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, “ಆಂಧ್ರಪ್ರದೇಶದ ಮಾರ್ಕಾಪುರಂನಲ್ಲಿ ಸಂಭವಿಸಿದ ಅಪಘಾತ ಅತ್ಯಂತ ದುಃಖಕರ. ತಮ್ಮ ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ” ಎಂದು ತಿಳಿಸಿದ್ದಾರೆ.
ಇದೇ ವೇಳೆ, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ನೀಡಲಾಗುವುದು ಎಂದು ಘೋಷಿಸಲಾಗಿದೆ.
ಗುರುವಾರ ಬೆಳಿಗ್ಗೆ ಮಾರ್ಕಾಪುರಂ ಬಳಿ ಅತಿ ವೇಗದಲ್ಲಿ ಬಂದ ಟಿಪ್ಪರ್ ಲಾರಿ ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಉಂಟಾದ ಅಗ್ನಿ ಅವಘಡದಲ್ಲಿ 10 ಮಂದಿ ಸಜೀವ ದಹನಗೊಂಡು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳೀಯ ಆಡಳಿತ ಮತ್ತು ರಕ್ಷಣಾ ಪಡೆಗಳು ತಕ್ಷಣ ಕಾರ್ಯಾಚರಣೆ ಆರಂಭಿಸಿ ನೆರವು ಕಾರ್ಯಗಳನ್ನು ಮುಂದುವರಿಸಿವೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa