
ಧಾರವಾಡ, 05 ಮಾರ್ಚ್ (ಹಿ.ಸ.):
ಆ್ಯಂಕರ್:ಜೀತ ಪದ್ಧತಿ ಮಾನವ ವಿರೋಧಿ ಅನಿಷ್ಠ ಸಂಪ್ರದಾಯವಾಗಿದ್ದು, ಇದನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಮಾಜದ ಎಲ್ಲರೂ ಕೈಜೋಡಿಸಬೇಕು. ಸಂಬಂಧಿತ ಇಲಾಖೆಗಳು ಹಾಗೂ ಅಧಿಕಾರಿಗಳಲ್ಲಿ ಸಮನ್ವಯತೆ ಸಾಧಿಸಿದಾಗ ಮಾತ್ರ ಜೀತ ಮುಕ್ತ ಜಿಲ್ಲೆ ನಿರ್ಮಾಣ ಸಾಧ್ಯ ಎಂದು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಹಾಗೂ ಜೀತ ಪದ್ಧತಿ (ರದ್ಧತಿ) ಕಾಯ್ದೆ-1976 ಮತ್ತು ಬಾಲ ಹಾಗೂ ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ-2016 ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜೀತ ಪದ್ಧತಿ ದಾಸ್ಯದ ಸಂಕೇತವಾಗಿದ್ದು, ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೊಳಿಸಿದ್ದರೂ ಕೆಲವು ಕಡೆ ಈ ಪದ್ಧತಿ ಇನ್ನೂ ಕಾಣಿಸಿಕೊಳ್ಳುವುದು ಆತಂಕಕಾರಿ. ಅಧಿಕಾರಿಗಳ ಇಚ್ಛಾಶಕ್ತಿ ಮತ್ತು ಕಾನೂನುಬದ್ಧ ಕ್ರಮಗಳ ಮೂಲಕವೇ ಇದನ್ನು ತಡೆಗಟ್ಟಲು ಸಾಧ್ಯ ಎಂದು ಹೇಳಿದರು.
ರಜಾದಿನಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದನ್ನು ತಡೆಯಬೇಕು. ಮಕ್ಕಳು ಶಾಲೆ ಬಿಟ್ಟು ಕೆಲಸಕ್ಕೆ ಹೋಗುತ್ತಿದ್ದರೆ ಸಂಬಂಧಿತರ ವಿರುದ್ಧ ಕ್ರಮ ಕೈಗೊಂಡು, ಅವರನ್ನು ಮರುಶಾಲೆಗೆ ಕರೆತರಬೇಕು ಎಂದು ಸೂಚಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಮಾತನಾಡಿ, ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿಸುವ ಘಟನೆಗಳು ಕಂಡುಬರುತ್ತಿದ್ದು, ಇಲಾಖೆಗಳು ಜಾಗೃತಿ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದರು.
ಕೈಗಾರಿಕಾ ಪ್ರದೇಶಗಳಿಗೆ ಅಧಿಕಾರಿಗಳು ನಿಯಮಿತ ಭೇಟಿ ನೀಡಿ, ಕಾರ್ಮಿಕರಿಗೆ ಸೌಲಭ್ಯಗಳು ತಲುಪುತ್ತಿವೆಯೇ ಪರಿಶೀಲಿಸಬೇಕು. ಅನ್ಯಾಯದ ಕುರಿತು ಬಂದ ಮಾಹಿತಿಯನ್ನು ನಿರ್ಲಕ್ಷ್ಯ ಮಾಡದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸಿಇಒ ಭುವನೇಶ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa