
ಗದಗ, 09 ಮಾರ್ಚ್ (ಹಿ.ಸ.)
ಆ್ಯಂಕರ್: ವಿದ್ಯುತ್ ತಂತಿಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿಕೊಂಡ ಬೆಂಕಿಗೆ ಕಟಾವು ಮಾಡಿ ಜಮೀನಿನಲ್ಲಿ ರಾಶಿಯಾಗಿ ಇಡಲಾಗಿದ್ದ ಮೆಕ್ಕೆಜೋಳ ಮತ್ತು ಕಡಲೆ ಬೆಳೆ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮಾಳವಾಡ ಗ್ರಾಮದಲ್ಲಿ ನಡೆದಿದೆ.
ಮಾಳವಾಡ ಗ್ರಾಮದ ರೈತ ದೇವರಾಜ್ ಅಂಗಿ ಅವರಿಗೆ ಸೇರಿದ ಮೆಕ್ಕೆಜೋಳ ಹಾಗೂ ಕಡಲೆ ಬೆಳೆ ಕಟಾವು ಮಾಡಿದ ನಂತರ ಜಮೀನಿನಲ್ಲಿ ರಾಶಿಯಾಗಿ ಇಡಲಾಗಿತ್ತು. ಈ ವೇಳೆ ಜಮೀನಿನ ಮೇಲ್ಭಾಗದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಯಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಿಡಿ ಬಿದ್ದು ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಬೆಳೆ ರಾಶಿಗೆ ವ್ಯಾಪಿಸಿ ಅಪಾರ ಪ್ರಮಾಣದ ಮೆಕ್ಕೆಜೋಳ ಮತ್ತು ಕಡಲೆ ಬೆಂಕಿಗೆ ಆಹುತಿಯಾಗಿದೆ.
ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರೂ ಆಗಾಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಸುಟ್ಟು ಭಸ್ಮವಾಗಿತ್ತು. ಕಷ್ಟಪಟ್ಟು ಬೆಳೆದ ಬೆಳೆ ಕಟಾವು ಮಾಡಿ ಸಂಗ್ರಹಿಸಿದ್ದರೂ ಕಣ್ಣೆದುರೇ ಬೆಂಕಿಗೆ ಆಹುತಿಯಾಗಿರುವುದರಿಂದ ರೈತ ದೇವರಾಜ್ ಅಂಗಿ ಹಾಗೂ ಅವರ ಕುಟುಂಬದವರು ದುಃಖದಲ್ಲಿ ಮುಳುಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ರೈತ ಕುಟುಂಬಕ್ಕೆ ಧೈರ್ಯ ಹೇಳಿದರು. ಈ ಅವಘಡಕ್ಕೆ ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದಲ್ಲಿ ಹಾದು ಹೋಗುತ್ತಿರುವ ವಿದ್ಯುತ್ ತಂತಿಗಳು ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ ಎಂದು ದೂರಿದರು.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಷ್ಟದ ಅಂದಾಜು ಮಾಡಿಸಿ ರೈತನಿಗೆ ಪರಿಹಾರ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಘಟನೆ ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP