
ಶಿವಮೊಗ್ಗ, 22 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪ್ರವಾಸಿಗರಿಗೆ ಉತ್ತಮ ಆಹಾರ ಸೌಲಭ್ಯ ಒದಗಿಸುವುದು ಹಾಗೂ ಸ್ಥಳೀಯ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ ರೂಪಿಸಿರುವ “ಮೊಬೈಲ್ ಕ್ಯಾಂಟೀನ್” ಯೋಜನೆಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಂದು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಶಿವಮೊಗ್ಗ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಸಂಚರಿಸಲಿರುವ ಈ ಮೊಬೈಲ್ ಕ್ಯಾಂಟೀನ್ ವಾಹನಗಳು ಪ್ರವಾಸಿಗರಿಗೆ ಮನೆಯೂಟದ ರುಚಿಯ ಆಹಾರ ಒದಗಿಸಲಿದ್ದು, ಸ್ಥಳೀಯ ಯುವಕರಿಗೆ ಉದ್ಯೋಗ ಮತ್ತು ಆರ್ಥಿಕ ಭದ್ರತೆ ನೀಡುವ ಉದ್ದೇಶ ಹೊಂದಿವೆ.
ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ಧಿಯಾಗಬೇಕು ಮತ್ತು ಅದರ ಲಾಭ ಸ್ಥಳೀಯ ಯುವಕರಿಗೆ ತಲುಪಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಸಚಿವರು ಹೇಳಿದರು. ಈ ಮೊಬೈಲ್ ಕ್ಯಾಂಟೀನ್ಗಳು ಪ್ರವಾಸಿಗರಿಗೆ ಉತ್ತಮ ಸೇವೆ ನೀಡುವುದರ ಜೊತೆಗೆ ಸ್ಥಳೀಯ ಆಹಾರ ಪದಾರ್ಥಗಳಿಗೂ ಉತ್ತೇಜನ ನೀಡಲಿವೆ ಎಂದು ತಿಳಿಸಿದರು.
ಇದೇ ವೇಳೆ, ಪ್ರವಾಸಿ ತಾಣಗಳ ಪಾವಿತ್ರ್ಯತೆ ಮತ್ತು ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಪ್ರವಾಸಿಗರಿಗೆ ಸೌಜನ್ಯಯುತ ಸೇವೆ ನೀಡುವಂತೆ ಫಲಾನುಭವಿಗಳಿಗೆ ಸಚಿವರು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa